ಮೈಸೂರು ಘಟನೆ: ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದ ಪೊಲೀಸರು, ಇನ್ನೂ ದೂರು ನೀಡದ ಯುವತಿ
Team Udayavani, Aug 28, 2021, 9:10 AM IST
ಮೈಸೂರು: ನಗರದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
ಮಹತ್ವದ ಸುಳಿವಿನ ಆಧಾರದಲ್ಲಿ ಮೈಸೂರು ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿತ್ತು. ಇಂದು ಮುಂಜಾನೆ ವೇಳೆಗೆ ತಮಿಳುನಾಡಿನಲ್ಲಿ ಐವರನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಮೈಸೂರು ಅತ್ಯಾಚಾರ ಪ್ರಕರಣ : ಸಂತ್ರಸ್ತೆಯ ಸ್ನೇಹಿತರಿಂದಲೇ ಕೃತ್ಯ?
ಮಂಗಳವಾರ ಸಂಜೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮುಂಬೈ ಮೂಲದ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಇಬ್ಬರೇ ಇದ್ದಾಗ ಆಗಮಿಸಿದ್ದ ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆ ನಡೆಸಿ ಯುವತಿಯ ಮೇಲೆ ದೌರ್ಜನ್ಯ ಎಸಗಿದ್ದರು.
ಆಸ್ಪತ್ರೆಯಿಂದ ಡಿಸ್ಚಾರ್ಜ್: ಆಸ್ಪತ್ರೆಗೆ ದಾಖಲಾಗಿದ್ದ ಸಂತ್ರಸ್ಥೆ ಮತ್ತು ಯುವಕ ಶುಕ್ರವಾರವೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದುವರೆಗೆ ಯುವಕ ಅಥವಾ ಯುವತಿ ದೂರು ನೀಡಿಲ್ಲ. ಪೊಲೀಸರೇ ಸುಮೋಟೊ ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.