ಸುತ್ತೂರು ಶ್ರೀಗಳ ಜಯಂತಿಗೆ ಉಪರಾಷ್ಟ್ರಪತಿ ಭಾಗಿ
Team Udayavani, Aug 26, 2018, 11:42 AM IST
ಮೈಸೂರು: ಸುತ್ತೂರು ಮಹಾಸಂಸ್ಥಾನ ಮಠದ 23ನೇ ಜಗದ್ಗರುಗಳಾದ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 103ನೇ ಜಯಂತಿ ಮಹೋತ್ಸವ ಹಾಗೂ 5.5 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡ ಉದ್ಘಾಟನೆ ಆ.28ರಂದು ಶ್ರೀಕ್ಷೇತ್ರದಲ್ಲಿ ನಡೆಯಲಿದ್ದು, ಉಪರಾಷ್ಟ್ರಪತಿ ಆಗಮಿಸುವರೆಂದು ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಪಿ.ಮಂಜುನಾಥ್ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಗ್ಗೆ 9.45ಕ್ಕೆ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯಸಾನಿಧ್ಯ ಹಾಗೂ ಸಿದ್ಧಗಂಗಾ ಕ್ಷೇತ್ರದ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಸಮ್ಮುಖದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಸಮಾರಂಭ ಉದ್ಘಾಟಿಸಲಿದ್ದಾರೆ ಎಂದರು.
ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದು, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಜೇಂದ್ರ ಸಂಪುಟ ಇಂಗ್ಲಿಷ್ ಅನುವಾದಿತ ಕೃತಿ, ಕೇಂದ್ರ ಸಚಿವ ಅನಂತಕುಮಾರ್ ಅವರು ಸುತ್ತೂರು ಸುರಧೇನು ಹಿಂದಿ ಅನುವಾದಿತ ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿ.ಎಸ್.ಯಡಿಯೂರಪ್ಪ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಸಿ.ಎಸ್.ಪುಟ್ಟರಾಜು, ಸಿ.ಪುಟ್ಟರಂಗಶೆಟ್ಟಿ, ಎನ್.ಮಹೇಶ್, ಸಂಸದ ಆರ್.ಧ್ರುವನಾರಾಯಣ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಮಧ್ಯಾಹ್ನ ಜೆಎಸ್ಎಸ್ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ, ಸಂಸ್ಥೆಯಲ್ಲಿ ಸೇವೆಸಲ್ಲಿಸುತ್ತಿರುವ ಸಂದರ್ಭದಲ್ಲಿ ಅಗಲಿದವರ ಕುಟುಂಬದವರನ್ನು ಅಭಿನಂದಿಸಲಾಗುವುದು. ಜತೆಗೆ ಪ್ರತಿಭಾಪುರಸ್ಕಾರ, ಪ್ರಸಾದ ದ್ವೆ„ಮಾಸಿಕ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಜತೆಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮಾಡಲಾಗುವುದು ಎಂದರು. ಜೆಎಸ್ಎಸ್ ಮಹಾ ವಿದ್ಯಾಪೀಠದ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಜಿ.ಬೆಟಸೂರ್ ಮಠ ಹಾಜರಿದ್ದರು.
ಸರಳ ಸಮಾರಂಭ
ಮೈಸೂರು: ಕೇರಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅನಾಹುತಗಳು ಸಂಭವಿಸಿ, ಜನರು ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಸಮಾರಂಭವನ್ನು ಸರಳವಾಗಿ ಆಚರಿಸಲಾಗುತ್ತಿದೆ ಎಂದು ಎಸ್.ಪಿ.ಮಂಜುನಾಥ್ ಹೇಳಿದರು.
ಅತಿವೃಷ್ಟಿಯ ಕಾರಣದಿಂದ ಜೆಎಸ್ಎಸ್ ಸಂಸ್ಥೆಗಳಲ್ಲಿ ಪ್ರತ್ಯೇಕವಾಗಿ ಶ್ರೀಗಳ ಜಯಂತಿ ಕಾರ್ಯಕ್ರಮ ಆಯೋಜಿಸುವುದನ್ನು ಕೈಬಿಟ್ಟು ಇತರೆ ಕಾರ್ಯಕ್ರಮಗಳ ಜೊತೆಗೆ ಸಾಂಕೇತಿಕವಾಗಿ ಆಚರಿಸುವ ಮೂಲಕ ಜಯಂತಿ ಕಾರ್ಯಕ್ರಮದ ವೆಚ್ಚದ ಹಣವನ್ನು ಪರಿಹಾರ ಕಾರ್ಯಗಳಿಗೆ ನೀಡಲು ತೀರ್ಮಾನಿಸಲಾಗಿದೆ. ಕೇರಳ ಹಾಗೂ ಕೊಡಗಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ ತಾತ್ಕಾಲಿಕ ಪರಿಹಾರಕ್ಕೆ ಅಗತ್ಯವಿದ್ದಲ್ಲಿ ಕೂಡಲೇ ನೀಡಲಾಗುವುದು ಎಂದು ಹೇಳಿದರು.