ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಗೆ ಖಂಡನೆ
Team Udayavani, May 12, 2022, 5:09 PM IST
ರಾಯಚೂರು: ಅಡುಗೆ ಅನಿಲ ದರ ದಿನೇದಿನೆ ಹೆಚ್ಚಿಸುತ್ತಿರುವ ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆ ಖಂಡಿಸಿ ಆಮ್ ಆದ್ಮಿ ಪಕ್ಷದ ನಗರದ ಘಟಕದ ಕಾರ್ಯಕರ್ತರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿ, ಕೇಂದ್ರ ಸರ್ಕಾರ ಗೃಹಬಳಕೆ ಗ್ಯಾಸ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಿಸಿರುವುದು ಹಾಗೂ ಮೂರು ತಿಂಗಳಲ್ಲಿ ಪೆಟ್ರೋಲ್, ಡಿಸೆಲ್, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವ ಮೂಲಕ ಸಾಮಾನ್ಯ ಜನರ ಮೇಲೆ ಬರೆ ಎಳೆಯುತ್ತಿದೆ ಎಂದು ದೂರಿದರು.
ಮಹಾಮಾರಿ ಕೋವಿಡ್ನಿಂದ ಜನ ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಕೇಂದ್ರ ಸರ್ಕಾರವು ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡುವ ಮಾಡಿದೆ. ಕೇಂದ್ರ ಸರ್ಕಾರವು ಕಾರ್ಪೋರೇಟ್ ಕಂಪನಿ ಪರವಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಬಂಡವಾಳಶಾಹಿ ಪರ ನೀತಿಗಳನ್ನೇ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಂದುವರೆಸಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ಮಧ್ಯೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ಟೀಕಿಸಿದರು.
ಕೇಂದ್ರ ಸರ್ಕಾರ ಕೂಡಲೇ ಅಡುಗೆ ಅನಿಲ್ ಬೆಲೆ ಹೆಚ್ಚಳವನ್ನು ಹಿಂಪಡೆಯಬೇಕು. ಜನರಿಗೆ ಹೊರೆಯಾಗದಂತೆ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ಪಕ್ಷದ ಜಿಲ್ಲಾ ಸಂಘಟನಾ ಕಾಯದರ್ಶಿ ಕೆ.ಬಸವರಾಜ ಗುತ್ತಿಗೆದಾರರು, ಡಿ.ವೀರೇಶ್ ಕುಮಾರ ವಕೀಲ, ಸದಸ್ಯರಾದ ವೀರೇಶ್ ಆರ್., ಶಿವಯ್ಯಶೆಟ್ಟಿ, ಮಕೂºಲ್ ಪಾಷಾ, ಜಾವೇದ್ ಖಾನ್, ಅಸ್ತಾಕ್, ಸುನೀಲ್, ಗೌಸ್, ರಿಜ್ವಾನ್, ಅನಿಸ್, ಶಿವಾನಂದ, ಕೃಷ್ಣ, ವಿನೋದ ಸೇರಿ ಇತರರಿದ್ದರು.