ತೋಟಗಾರಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಿಎಂಗೆ ಮನವಿ
Team Udayavani, May 3, 2020, 4:33 PM IST
ಇಂಡಿ: ಆವರ್ತ ನಿಧಿಯಲ್ಲಿ ತೋಟಗಾರಿಕೆ ಬೆಳೆಗಳಾದ ದ್ರಾಕ್ಷಿ, ದಾಳಿಂಬೆ, ಕಲ್ಲಂಗಡಿ, ಲಿಂಬೆ, ಕರಬೂಜ್ ಬೆಳೆಗಾರರಿಗೆ ಪರಿಹಾರ ನೀಡಬೇಕೆಂದು ವಿಡಿಯೋ ಕಾನ್ಫರೆನ್ಸ್ನಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಮ್ಮ ಜಿಲ್ಲೆಯಲ್ಲಿ ಅತೀ ಹೆಚ್ಚಾಗಿ ತೋಟಗಾರಿಕೆ ಬೆಳೆ ಬೆಳೆಯಲಾಗುತ್ತಿದೆ. ಕೋವಿಡ್-19ರಿಂದಾಗಿ ತೋಟಗಾರಿಕೆ ಬೆಳೆ ಮಾರಾಟವಾಗದೇ ಹಾನಿಗೀಡಾಗಿದ್ದು, ರೈತ ಸಾಲಗಾರನಾಗಿದ್ದಾನೆ. ಆದ್ದರಿಂದ ರೈತರಿಗೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದೇನೆ. ಕಲ್ಲಂಗಡಿ ಬೆಳೆಗಾರರಿಗೆ ಎಕರೆಗೆ 40 ಸಾವಿರ ರೂ. ಪರಿಹಾರ ನೀಡುವಂತೆ ಸರಕಾರಕ್ಕೆ ಒತ್ತಾಯಿಸಲಾಗಿದ್ದು ಸರಕಾರ ಸ್ಪಂದಿಸಿದೆ. ಮುಂದಿನ ಮೂರು ತಿಂಗಳ ಒಳಗಾಗಿ ಈ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಲಿ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಅನುಮತಿ ನೀಡಿದ್ದಕ್ಕಾಗಿ ಅಭಿನಂದನೆ ಸಲ್ಲಿಸಿದ ಅವರು ನಮ್ಮ ಜಿಲ್ಲೆಯ ಅನೇಕ ಕಾರ್ಮಿಕರು ಗೋವಾ ರಾಜ್ಯಕ್ಕೆ ಕೆಲಸಕ್ಕೆ ಹೋಗಿ ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಈಗ ಮರಳಿ ತವರಿಗೆ ಬರಲು ಅವಕಾಶ ಕೊಟ್ಟಿದ್ದಕ್ಕಾಗಿ ಸರಕಾರಕ್ಕೆ ಕೈತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.