ಆತುರದ ಕರ್ನಾಟಕ ಬಂದ್ ಠುಸ್!
Team Udayavani, May 29, 2018, 2:38 PM IST
ರಾಯಚೂರು: ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಎಲ್ಲ ಬ್ಯಾಂಕ್ ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಬಿಜೆಪಿ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ ಭರವಸೆಯಂತೆ ರೈತರ ಸಂಪೂರ್ಣ ಸಾಲ ಮನ್ನಾ ಘೋಷಿಸಬೇಕು ಎಂದು ಹಮ್ಮಿಕೊಂಡ ಬಂದ್ಗೆ ಜಿಲ್ಲಾ ಕೇಂದ್ರ ಮಾತ್ರವಲ್ಲದೇ ವಿವಿಧ ತಾಲೂಕು ಮತ್ತು ಹೋಬಳಿಯಲ್ಲೂ ಕಿಂಚಿತ್ತೂ ಪ್ರತಿಕ್ರಿಯೆ ಕಂಡುಬರಲಿಲ್ಲ. ಜನಜೀವನ, ಸಾರಿಗೆ, ವ್ಯಾಪಾರ ವಹಿವಾಟು ಎಂದಿನಂತಿದ್ದರೆ, ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಪ್ರತಿಪಕ್ಷದ ನಾಯಕ ಬಿ.ಎಸ್ .ಯಡಿಯೂರಪ್ಪರ ಸೂಚನೆ ಮೇರೆಗೆ ಬಂದ್ ಗೆ ಕರೆ ನೀಡಲಾಗಿತ್ತು. ಸಾರ್ವಜನಿಕರಿರಲಿ
ಹೋರಾಟದ ಕೇಂದ್ರ ಬಿಂದುವಾದ ರೈತಾಪಿ ವರ್ಗ, ರೈತ ಸಂಘಟನೆಗಳು, ಮುಖಂಡರೇ ದೂರ ಸರಿದ ಕಾರಣ ಬಂದ್ ಹೋರಾಟಕ್ಕೆ ಸೀಮಿತ ಎನ್ನುವಂತಾಯಿತು. ಬಿಜೆಪಿ ಮುಖಂಡರು, ಕಾರ್ಯಕರ್ತರು ಮಾತ್ರ ಬಜಾರ್ನಲ್ಲಿ ಬಲವಂತದಿಂದ ಅಂಗಡಿ ಮುಂಗಟ್ಟು ಮುಚ್ಚಿಸುವ ಪ್ರಹಸನ ನಡೆಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಗರದ ರಾಜೇಂದ್ರ ಗಂಜ್ ವೃತ್ತದಲ್ಲಿ ಸೇರಿದ ಬಿಜೆಪಿ ಮುಖಂಡರು ಎಪಿಎಂಸಿ ವರ್ತಕರ ಅಂಗಡಿ, ಬಂಗಾರ ಬಜಾರ್, ಬಟ್ಟೆ ಬಜಾರ್, ಕಿರಾಣಿ ಅಂಗಡಿ ಲೈನ್, ಉಸ್ಮಾನಿಯಾ ತರಕಾರಿ ಮಾರುಕಟ್ಟೆ ಮತ್ತು ಗಾಂಧಿ ವೃತ್ತದವರೆಗಿನ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ಮಾಡಲು ಯತ್ನಿಸಿದರು. ಆ ಕ್ಷಣಕ್ಕೆ ಅಂಗಡಿಗಳನ್ನು ಮುಚ್ಚಿದ ವರ್ತಕರು ಕೆಲ ಹೊತ್ತಿನಲ್ಲಿಯೇ ಪುನಃ ಆರಂಭಿಸಿದರು. ಬಿಜೆಪಿ ಕಾರ್ಯಕರ್ತರು ಪಕ್ಷದ ಧ್ವಜ ಹಿಡಿದು ವಿವಿಧ ವೃತ್ತಗಳು, ಮುಖ್ಯ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆ, ಈಗ ಸಂಪೂರ್ಣ ಅಧಿಕಾರವಿಲ್ಲ. ಕಾಂಗ್ರೆಸ್ ನಾಯಕರನ್ನು ಕೇಳಬೇಕು ಎಂಬ ನಾಟಕ ಶುರು ಮಾಡಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಸಂಪೂರ್ಣ ಸಾಲ ಮನ್ನಾ ಮಾಡಬೇಕು.
ಇಲ್ಲವಾದಲ್ಲಿ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ಜೆ.ಶರಣಪ್ಪಗೌಡ, ಶಾಸಕ ಡಾ| ಶಿವರಾಜ ಪಾಟೀಲ, ಮುಖಂಡರಾದ ಎನ್.ಶಂಕ್ರಪ್ಪ, ಯು.ದೊಡ್ಡ ಮಲ್ಲೇಶ. ಎ.ಚಂದ್ರಶೇಖರ, ನರಸಪ್ಪ, ಆಂಜನೇಯ ಕಡಗೋಲು, ಶಶಿಧರ ಮಸ್ಕಿ, ಮುಕ್ತಿಯಾರ್ ಪಾಷಾ ಸೇರಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ