ಸರ್ಕಾರ ಮಕ್ಕಳಿಗೆ ಮೊಟ್ಟೆ ವಿತರಣೆ ಮುಂದುವರಿಸಲಿ
Team Udayavani, Dec 12, 2021, 3:38 PM IST
ರಾಯಚೂರು: ಸರ್ಕಾರಿ ಶಾಲೆ ಮಕ್ಕಳಿಗೆ ವಾರದಲ್ಲಿ ಮೂರು ದಿನ ಮೊಟ್ಟೆ, ಬಾಳೆಹಣ್ಣು ನೀಡುವ ನಿರ್ಧಾರ ಉತ್ತಮವಾಗಿದ್ದು, ಸರ್ಕಾರ ಯಾವುದೇ ಒತ್ತಡಕ್ಕೂ ಮಣಿಯದೆ ಯೋಜನೆ ಮುಂದುವರಿಸಬೇಕು ಎಂದು ಒತ್ತಾಯಿಸಿ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಶನಿವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಅಪೌಷ್ಟಿಕತೆ ನಿವಾರಣೆ ಮಾಡಲು ಸರ್ಕಾರ ಮೊಟ್ಟೆ, ಬಾಳೆಹಣ್ಣು ವಿತರಣೆ ನೀಡಲು ಮುಂದಾಗಿದೆ. ಈ ನಿರ್ಧಾರದಿಂದ ಸರ್ಕಾರಿ ಶಾಲೆಗಳ ಹಾಜರಾತಿಯಲ್ಲಿ ಶೇ.10-12ರಷ್ಟು ಏರಿಕೆ ಕಂಡಿದೆ. ಆದರೆ, ರಾಜ್ಯದ ಕೆಲ ಮಠಾಧಿಧೀಶರು, ಸ್ವಾಮೀಜಿಗಳು ಮೊಟ್ಟೆ ವಿತರಣೆ ಕೈ ಬಿಡಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಧರ್ಮವನ್ನು ಅಡ್ಡ ತಂದು ಯೋಜನೆಗೆ ತೊಡಕುಂಟು ಮಾಡುವ ಯತ್ನ ನಡೆದಿದೆ. ಆದರೆ, ಸರ್ಕಾರ ಯಾವುದೇ ಕಾರಣಕ್ಕೂ ಈ ಯೋಜನೆ ಕೈ ಬಿಡಬಾರದು ಎಂದು ಒತ್ತಾಯಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚಾಗಿ ಕಂಡು ಬರುತ್ತಿದೆ. ಶೇ.80ರಷ್ಟು ಮಕ್ಕಳು ಮೊಟ್ಟೆ ಬೇಕೆಂದು ಬೇಡಿಕೆ ಇಟ್ಟಿದ್ದಾರೆ. 1.44 ಲಕ್ಷ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಮೊಟ್ಟೆ ಸಹಾಯಕವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳು ಬಹುತೇಕ ಬಡ ಹಿಂದುಳಿದ ವರ್ಗಗಳಿಗೆ ಸೇರಿದವರಾಗಿದ್ದಾರೆ. ಸರ್ಕಾರ ಯಾವುದೇ ಕಾರಣಕ್ಕೂ ಮೊಟ್ಟೆ ವಿತರಣೆ ಕೈ ಬಿಡಬಾರದು ಎಂದು ಒತ್ತಾಯಿಸಿದರು.
ಸಂಘಟನೆಯ ಮುಖಂಡರಾದ ಶಿವಕುಮಾರ ಮ್ಯಾಗಳಮನಿ, ಭೀಮನಗೌಡ ಸುಂಕೇಶ್ವರ ಹಾಳ, ಬಸವರಾಜ್ ದೀನಸಮುದ್ರ, ಚಿದಾನಂದ ಕರಿಗೂಳಿ, ಮೌನೇಶ ಬುಳ್ಳಾಪುರ, ನರಸಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.