ವಿದ್ಯಾರ್ಥಿನಿ ನಿಗೂಢ ಸಾವು ಭುಗಿಲೆದ್ದ ಜನಾಕ್ರೋಶ
Team Udayavani, Apr 26, 2019, 6:08 AM IST
ರಾಯಚೂರು: ನವೋದಯ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿಗೆ ನ್ಯಾಯ ಕಲ್ಪಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಗುರುವಾರ ಬೃಹತ್ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.ಜಿಲ್ಲಾ ವಿಶ್ವಕರ್ಮ ಸಮಾಜದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ವಿದ್ಯಾರ್ಥಿಗಳು ನಗರದ ಮಾಣಿಕ್ ಪ್ರಭು ದೇವಸ್ಥಾನದಿಂದ ಡಿಸಿ
ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿದರು. ನಟಿ ಹರ್ಷಿಕಾ ಪೂಣಚ್ಚ, ನಟ ಭುವನ್ ಕೂಡ ಪ್ರತಿಭಟನೆಯಲ್ಲಿಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಚೇರಿಯೊಳಗೆ ನುಗ್ಗಲೆತ್ನಿಸಿದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಈ ವೇಳೆ, ಆಕ್ರೋಶಗೊಂಡ ಯುವಕರು ಕಲ್ಲು ತೂರಾಟ ನಡೆಸಿದರು.
ಈ ವೇಳೆ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಗುರು ಅವರ ತಲೆಗೆ ಕಲ್ಲು ತಾಗಿ ಗಾಯವಾಗಿದೆ. ಇದೇ ವೇಳೆ, ಯುವಕರು ಚಪ್ಪಲಿ, ನೀರಿನ ಬಾಟಲಿಗಳನ್ನು ಎಸೆದರು. ಆಗ ಪೊಲೀಸರು ಮತ್ತೆ ಲಾಠಿ ಪ್ರಹಾರ ನಡೆಸಿದ್ದು, ಚಪ್ಪಲಿ ಎಸೆಯುತ್ತಿದ್ದ ಶಿವಕುಮಾರ್ ಎಂಬಾತನನ್ನು ಬಂಧಿಸಿದ್ದಾರೆ.ದಾರಿಯುದ್ದಕ್ಕೂ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದರಿಂದ ವರ್ತಕರು ಸ್ವಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳಿಗೆ ಬೀಗ ಹಾಕಿದ್ದರು. ಇದಕ್ಕೂ ಮುನ್ನ, ವಿಶ್ವಕರ್ಮ ಸಮಾಜದ ಮುಖಂಡ ಮಾರುತಿ ಬಡಿಗೇರ್, ಮೈ
ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದಾಗ, ಪೊಲೀಸರು ಅವರನ್ನು ತಡೆದು, ರಿಮ್ಸ್ಗೆ ಕರೆದೊಯ್ದರು.ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಧಿಕಾರಿ ಶರತ್
ಬಿ.ಮನವಿ ಸ್ವೀಕರಿಸಿ, ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.
ಸಿಐಡಿ ತನಿಖೆ ಚುರುಕು: ಈ ಮಧ್ಯೆ, ವಿದ್ಯಾರ್ಥಿನಿ ಶಂಕಾಸ್ಪದ ಸಾವಿನ ಪ್ರಕರಣ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು,ಗುರುವಾರ ಆರೋಪಿ ಸುದರ್ಶನ ಯಾದವ ಹಾಗೂ ಯುವತಿ ಮನೆಗಳಿಗೆ ತೆರಳಿ ಮಾಹಿತಿ ಪಡೆದರು.