ಶೈಕ್ಷಣಿಕ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಹಿರಿದು
Team Udayavani, Sep 25, 2018, 3:07 PM IST
ಮಾನ್ವಿ: ದೇಶದ ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಪಾತ್ರ ಬಹು ದೊಡ್ಡದು ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು. ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟದಿಂದ ಪಟ್ಟಣದ ಸೂರ್ಯ ಕನ್ವೆನ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕ್ಷೇತ್ರ ಖಾಸಗಿ ಮತ್ತು ಸರ್ಕಾರದ ಸಹಭಾಗಿತ್ವದಲ್ಲಿ ನಡೆದರೆ ವೇಗವಾಗಿ ಅಭಿವೃದ್ಧಿ ಸಾಧಿಸಬಹುದಾಗಿದೆ. ಅದೆ ರೀತಿ ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಣ ನೀಡುವ ಕಾರ್ಯ ನಡೆಯುತ್ತಿರುವುದರಿಂದ ಶೈಕ್ಷಣಿಕ ಪ್ರಗತಿ ಸಾಧಿಸಲು ಸಹಕಾರಿ ಆಗಿದೆ ಎಂದರು.
ಸಾಮಾಜಿಕ ಪರಿವರ್ತನೆಯಲ್ಲಿ ಹಾಗೂ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ದೇಶದ ಸರ್ವತೋಮುಖ ಅಭಿವೃದ್ಧಿಯ ಬುನಾದಿಯೇ ಶಿಕ್ಷಣವಾಗಿದೆ. ಆದ್ದರಿಂದ ಶಿಕ್ಷಕರು ಸಹ ಯಾವುದೇ ಸ್ವಾರ್ಥ, ಲಾಭ ಬಯಸದೆ ಉತ್ತಮ ಶಿಕ್ಷಣ ನೀಡಬೇಕು. ಗೌರವಾನ್ವಿತ ಗುರುವಿನ ಸ್ಥಾನಕ್ಕೆ ಧಕ್ಕೆ ಬಾರದಂತೆ ನಡೆದುಕೊಳ್ಳಬೇಕು. ಮಕ್ಕಳಲ್ಲಿನ ಕ್ರೀಡೆ, ಓದು, ನೃತ್ಯ, ಸೇರಿದಂತೆ ವಿವಿಧ ಪ್ರತಿಭೆ ಇರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ಮಾಜಿ ಶಾಸಕ ಹಂಪಯ್ಯ ನಾಯಕ, ಹಿರಿಯ ಉಪನ್ಯಾಸಕ ರಮೇಶಬಾಬು ಯಾಳಗಿ ಮಾತನಾಡಿದರು. ವಿವಿಧ ಖಾಸಗಿ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಕಲ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಿಹಾಳ, ಖಾಸಗಿ ಶಾಲಾ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತಾಲೂಕು ಅಧ್ಯಕ್ಷ ಶಫುದ್ದೀನ್ ಪೋತ್ನಾಳ, ಜೆಡಿಎಸ್ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ ಬಲ್ಲಟಗಿ, ಬಿ.ವಿ.ರೆಡ್ಡಿ, ಶಶಿಕಲಾ ಪಾಟೀಲ, ಸರಿತಾ ಜೈನ ಇತರರಿದ್ದರು.