ನಿಗದಿತ ಅವಧಿಗೆ ಕಾಮಗಾರಿ ಮುಗಿಸಿ
ಲೋಪದೋಷ ಕಂಡು ಬಂದರೆ ಶಿಸ್ತು ಕ್ರಮ: ದರ್ಶನಾಪುರ
Team Udayavani, Aug 21, 2019, 1:00 PM IST
ಶಹಾಪುರ: ಹೊಸೂರ-ಅಣಬಿ ಗ್ರಾಮದ ವಿವಿಧ ಕಾಮಗಾರಿಗಳನ್ನು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಪರಿಶೀಲಿಸಿದರು.
ಶಹಾಪುರ: ಅಭಿವೃದ್ಧಿ ಕಾಮಗಾರಿಗಳಲ್ಲಿ ಯಾವುದೇ ಲೋಪದೋಷ ಆಗದಂತೆ ಕಾಮಗಾರಿ ಪೂರ್ಣಗೊಳಿಸಬೇಕು. ಗುಣಮಟ್ಟದಿಂದ ಕೂಡಿರಬೇಕು. ಇಲ್ಲವಾದಲ್ಲಿ ತಪ್ಪಿತಸ್ಥ ಅಧಿಕಾರಿಗಳಾಗಲಿ ಅಥವಾ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ತಾಲೂಕಿನ ಹೊಸೂರು ಮತ್ತು ಅಣಬಿ ಗ್ರಾಮದಲ್ಲಿ 2019-20ನೇ ಸಾಲಿನ ಎಚ್ಕೆಆರ್ಡಿಬಿ ಅನುದಾನದಡಿ 15 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಯೋಜನೆ ಹಾಗೂ 48 ಲಕ್ಷ ರೂ. ವೆಚ್ಚದಲ್ಲಿ ಶಾಲಾ ಕಟ್ಟಡ ಹಾಗೂ ಸಿ.ಸಿ. ರಸ್ತೆ, ಚರಂಡಿ ಕಾಮಗಾರಿಗಳು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.
ಆಯಾ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಗಿಸಬೇಕು. ನಿರ್ಲಕ್ಷ್ಯ ವಹಿಸುವುದು ಸಲ್ಲದು. ಅಲ್ಲದೆ ಹೊಸರು ಮತ್ತು ಅಣಬಿ ಗ್ರಾಮದಲ್ಲಿ ಈ ಹಿಂದೆ 2014-15ನೇ ಸಾಲಿನಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರಿಂದ ವಿವಿಧ ಗ್ರಾಮಗಳಿಗೆ ನೀರು ಸರಬರಾಜು ಮಾಡಲಾಗುತ್ತಿತ್ತು. ಆದರೆ ಕಾರಣಾಂತರಗಳಿಂದ ಅದು ಸ್ಥಗಿತಗೊಂಡಿದೆ. ಪ್ರಸ್ತುತ ಅದನ್ನು ಎರಡು ಗ್ರಾಮಸ್ಥರ ಮನವಿಯಿಂದ ಪುನರ್ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಯಲ್ಲಪ್ಪ, ಜ್ಞಾನಪ್ಪ ಸೇರಿದಂತೆ ಗ್ರಾಮದ ಮುಖಂಡರು, ಯುವಕರು ಗ್ರಾಮಸ್ಥರು ಇದ್ದರು.