ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ
Team Udayavani, Feb 3, 2019, 7:20 AM IST
ತುಮಕೂರು: ಬೇಸಿಗೆ ಸಮೀಪಿಸುತ್ತಿರುವು ದರಿಂದ ಜಿಲ್ಲೆಯ ಜನರಿಂದ ನೀರಿಲ್ಲ ಎನ್ನುವ ಕೂಗು ನನಗೆ ಬರದಂತೆ ಮುಂಜಾಗ್ರತೆ ವಹಿಸ ಬೇಕು… ಕಳೆದೆರಡು ತಿಂಗಳಿಂದ ಹಲವಾರು ಬಾರಿ ಸೂಚನೆ ನೀಡಿದ್ದರೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ… ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಜನರಿಂದ ದೂರುಗಳು ಬಂದಲ್ಲಿ ನಾನು ಸಹಿಸುವುದಿಲ್ಲ… ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳ ಲಾಗುವುದು…
ಇದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಿಗೆ ನೀಡಿದ ಖಡಕ್ ಎಚ್ಚರಿಕೆ. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಬರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಬರುವ ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಾರದು.
ಸರ್ಕಾರ ದಿಂದ ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಜಿಲ್ಲೆಯ ಪ್ರತಿ ತಾಲೂಕಿಗೆ 1 ಕೋಟಿ ರೂ.ಗಳ ಅನುದಾನ ಅನುಮೋದನೆಯಾಗಿದೆ. ಈ ಅನು ದಾನದಡಿ ಕುಡಿಯುವ ನೀರಿಗಾಗಿ ಕೈಗೆತ್ತಿ ಕೊಂಡಿರುವ 184 ಕಾಮಗಾರಿಗಳ ಪೈಕಿ 71 ಕಾಮಗಾರಿಗಳು ಮಾತ್ರ ಪೂರ್ಣಗೊಂಡಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಅಧಿ ಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿ ಸುತ್ತಿಲ್ಲ. ಸಭೆಗೆ ಬರುವಾಗ ನಿಖರ ಮಾಹಿತಿ ತರುವುದಿಲ್ಲ ಎಂದು ಕಿಡಿ ಕಾರಿದರು.
ಅನುದಾನ ಬಿಡುಗಡೆಯಾಗಿದೆ: ಕುಡಿಯುವ ನೀರಿನ ಕಾಮಗಾರಿಗಳಿಗಾಗಿ ಪ್ರತೀ ತಾಲೂಕಿಗೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 50 ಲಕ್ಷ ರೂ. ಹಾಗೂ ಕಂದಾಯ ಇಲಾಖೆಯಿಂದ 25 ಲಕ್ಷ ರೂ. ಈಗಾಗಲೇ ಬಿಡುಗಡೆಯಾಗಿದ್ದು, ಇನ್ನೊಂದು ವಾರದೊಳಗಾಗಿ ಕುಡಿಯುವ ನೀರಿನ ಅಪೂರ್ಣ ಕಾಮಗಾರಿಗಳನ್ನು ಪೂರ್ಣ ಗೊಳಿಸಿ ಗ್ರಾಮವಾರು ಮಾಹಿತಿ ತಮಗೆ ನೀಡಬೇಕು.
ಪಂಚಾಯತಿ ಅಭಿವೃದ್ಧಿ ಅಧಿ ಕಾರಿಗಳು ತಮ್ಮ ಗ್ರಾಪಂ ವ್ಯಾಪ್ತಿಯಲ್ಲಿ ದುರಸ್ತಿ ಯಲ್ಲಿರುವ ಕೊಳವೆಬಾವಿಗಳನ್ನು ವೈಯಕ್ತಿಕ ವಾಗಿ ಸ್ಥಳಕ್ಕೆ ಭೇಟಿ ನೀಡಿ ಮಹಜರ್ ಮಾಡಿ ಆಯಾ ತಹಶೀಲ್ದಾರ್ ಹಾಗೂ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ವರದಿ ನೀಡಬೇಕು ಎಂದು ಸೂಚಿಸಿದರು.
ಆದ್ಯತೆ ಮೇಲೆ ಕ್ರಮ ಕೈಗೊಳ್ಳಿ: ಕೊಳವೆಬಾವಿ ಕೆಟ್ಟು ಹೋಗಿ ಕುಡಿಯುವ ನೀರಿಗೆ ಜನರು ಪರದಾಡುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು. ಕೆಟ್ಟುನಿಂತಿರುವ ಕೊಳವೆ ಬಾವಿಗಳ ದುರಸ್ತಿ ಕೈಗೊಳ್ಳಲು ಎಲ್ಲ ಪಂಚಾಯತಿಗಳಲ್ಲಿ 14ನೇ ಹಣಕಾಸು ಯೋಜನೆಯಡಿ 7 ಲಕ್ಷ ರೂ.ಗಳ ಅನುದಾನ ಲಭ್ಯವಿದ್ದು, ಯಾರಿಗೂ ಕಾಯದೇ ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು. ಮಾರ್ಚ್ ಮೊದಲ ವಾರದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆಯಿದ್ದು, ಫೆಬ್ರವರಿ ತಿಂಗಳೊಳಗೆ ಎಲ್ಲ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಸೂಚನೆ: ಜಿಲ್ಲೆಯ ಪಾವಗಡ ತಾಲೂಕಿನ ಜನರಿಂದ ನೀರಿನ ಸಮಸ್ಯೆ ಬಗ್ಗೆ ಪ್ರತೀದಿನ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಕೂಡಲೇ ಕಾರ್ಯತತ್ಪರರಾಗಬೇಕು. ಆರ್ಓ ಪ್ಲಾಂಟ್ಗಳು ಜನವಸತಿಯಿಂದ ದೂರವಿರುವ ಕಡೆ ವಯೋವೃದ್ಧರು, ಮಹಿಳೆಯರು, ರೋಗ ಪೀಡಿತರ ಹಿತದೃಷ್ಟಿಯಿಂದ ಅವರ ಮನೆ ಬಳಿ ಯಲ್ಲಿಯೇ ಕುಡಿಯುವ ನೀರನ್ನು ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶುಭಾ ಕಲ್ಯಾಣ್, ಪಾಲಿಕೆ ಆಯುಕ್ತ ಭೂಬಾಲನ್, ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.