ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಂಡರೆ ಕ್ರಮ
Team Udayavani, Feb 12, 2019, 7:25 AM IST
ತುಮಕೂರು: ಕೆಲವೇ ದಿನಗಳಲ್ಲಿ ಲೋಕ ಸಭಾ ಚುನಾವಣೆ ಘೋಷಣೆಯಾಗಲಿದ್ದು, ಇಲ್ಲದ ಸಬೂಬು ಹೇಳಿ ಚುನಾವಣಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ರಾಕೇಶ್ಕುಮಾರ್ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ತುರ್ತು ಚುನಾ ವಣಾ ವಿಷಯಗಳಿಗೆ ಸಂಬಂಧಿಸಿದಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗುವ ಎಲ್ಲ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿ ಕಾರಿಗಳು ಹಾಗೂ ಮತ್ತಿತರ ಅಧಿಕಾರಿಗಳು ಚುನಾವಣಾ ಆಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ಚುನಾವಣಾ ಪೂರ್ವ ಸಿದ್ಧತೆ ಬಗ್ಗೆ ನಡೆಯುವ ಎಲ್ಲ ತರಬೇತಿಗಳು ಹಾಗೂ ಸಭೆಗಳಿಗೆ ಕಡ್ಡಾಯ ವಾಗಿ ಹಾಜರಾಗಬೇಕು ಎಂದು ಸೂಚಿಸಿ, ಚುನಾವಣಾ ಕೆಲಸ ನಿಗದಿತ ಅವಧಿಯಲ್ಲಿ ಮುಗಿಸಬೇಕು. ಯಾವುದೇ ಲೋಪದೋಷ ಗಳಿಲ್ಲದೆ ಪಾರದರ್ಶಕವಾಗಿ ಚುನಾವಣೆ ನಡೆಸಲು ಸಿದ್ಧರಾಗಿರಬೇಕು ಎಂದು ಸೂಚಿಸಿದರು.
ನಿರ್ದೇಶನ: ನಿಯೋಜಿತ ಎಲ್ಲ ನೋಡಲ್ ಅಧಿಕಾರಿಗಳು ತಪ್ಪದೇ ತಮ್ಮ ವ್ಯಾಪ್ತಿಯ ಮತ ಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ, ಕಿಟಕಿ- ಬಾಗಿಲುಗಳು ಸುಸ್ಥಿತಿ, ಶೌಚಾಲಯ, ಬೆಳಕು, ನೀರಿನ ವ್ಯವಸ್ಥೆಯಿರುವ ಬಗ್ಗೆ ಭೌತಿಕ ಪರಿಶೀಲನೆ ನಡೆಸಿ ಅಗತ್ಯವಿರುವ ಕಡೆ ಮೂಲ ಸೌಕರ್ಯ ಒದಗಿಸಬೇಕು.
ಮತದಾನ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ವಿಕಲ ಚೇತನರಿಗೆ ವ್ಹೀಲ್ ಚೇರ್, ದೃಷ್ಟಿದೋಷವುಳ್ಳ ವರಿಗೆ ಭೂತಕನ್ನಡಿ ಒದಗಿಸುವ ವ್ಯವಸ್ಥೆ ಮಾಡಬೇಕು. ಮತದಾನ ಕೊಠಡಿಯಲ್ಲಿ ದುರಸ್ತಿ ಯಲ್ಲಿರುವ ವಿದ್ಯುದ್ದೀಪಗಳನ್ನು ಸರಿಪಡಿಸಲು ಎಲ್ಲ ಪಿಡಿಒಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ನಿರ್ದೇಶನ ನೀಡಿದರು.
ಅಮಾನತು ಎಚ್ಚರಿಕೆ: ನೋಡಲ್ ಅಧಿಕಾರಿಗಳು ಯಾವುದೇ ಕಾರಣಕ್ಕೂ ರಾಜಕೀಯ ನಾಯಕರ ಅಥವಾ ಯಾವುದೇ ಪಕ್ಷದ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡುವುದು, ವಿಡಿಯೋಗಳನ್ನು ಪ್ರಸಾರ ಮಾಡುವುದು ಕಂಡು ಬಂದರೆ ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಚುನಾ ವಣಾ ಮಾದರಿ ನೀತಿ ಸಂಹಿತೆಯಡಿ ಮತ ದಾನ ದಿನದ 48 ಗಂಟೆಗಳ ಮುನ್ನ ರಾಜ ಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ಸಂಬಂಧಿಸಿದ ಪ್ರಚಾರ ಸಾಮಗ್ರಿ ತೆರವುಗೊಳಿಸಬೇಕು.
ಸಂಹಿತೆ ಜಾರಿ ಅವಧಿಯಲ್ಲಿ ಚುನಾವಣಾ ಪ್ರಚಾರಕ್ಕಾಗಿ ಏರ್ಪಡಿಸುವ ಕಾರ್ಯಕ್ರಮಗಳಿ ಗಾಗಿ ಬಳಸಲಾಗುವ ಕರಪತ್ರ, ಪೋಸ್ಟರ್, ಹೋರ್ಡಿಂಗ್ಸ್, ಧ್ವನಿವರ್ಧಕಗಳು, ವಿಡಿಯೋ ಚಿತ್ರೀಕರಣ, ಛಾಯಾಚಿತ್ರ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೇ ಚುನಾವಣೆಯನ್ನು ಶಾಂತಿ ಯುತವಾಗಿ ನಡೆಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ, ಜಿಪಂ ಸಿಇಒ ಶುಭಾ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೋನ ವಂಶಿಕೃಷ್ಣ, ಚುನಾವಣಾ ತಹಶೀಲ್ದಾರ್ ಮೋಹನ್, ಮತ್ತಿತರೆ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.