ಸರಳವಾಗಿ ಗಣೇಶ ಪ್ರತಿಷ್ಠಾಪಿಸಿ
Team Udayavani, Aug 19, 2020, 3:16 PM IST
ಚಿಕ್ಕನಾಯಕನಹಳ್ಳಿ: ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವವರು ನಾಲ್ಕು ಅಡಿ, ಮನೆಯಲ್ಲಿ ಪ್ರತಿಷ್ಠಾಪಿಸುವವರು 2 ಆಡಿ ಎತ್ತರ ಮೀರದ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಲು ಅವಕಾಶ ನೀಡಲಾ ಗಿದೆ ಎಂದು ತಹಶೀಲ್ದಾರ್ ತೇಜಸ್ವಿನಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ 19ರ ಸಂಕ್ರಾಮಿಕ ರೋಗದ ಹರಡುವಿಕೆಯ ಭೀತಿಯಿಂದ ಗಣೇಶ ಚತುರ್ಥಿ ಹಬ್ಬವನ್ನು ಸರಳವಾಗಿ ಆಚರಿಸಲು ಸರ್ಕಾರ ಆದೇಶ ನೀಡಿದೆ. ಸಂಘಟನೆಗಳು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು, ಮುನ್ಸಿಪಲ್, ಸ್ಥಳೀಯ ಆಡಳಿತ ಹಾಗೂ ಪೊಲೀಸ್ನಿಂದ ಅನುಮತಿ ಕಡ್ಡಾಯವಾಗಿದೆ. ಗಣಪತಿ ಪ್ರತಿಷ್ಠಾಪನೆ ಸ್ಥಳದಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು, ಒಮ್ಮೆಲೆ 20 ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು, ಸಾಂಸ್ಕೃತಿಕ ಕಾರ್ಯ ಕ್ರಮಗಳನ್ನು ಹಾಗೂ ಗಣಪತಿ ಮೆರವಣಿಗೆ ನಿಷೇಧಿಸಲಾಗಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸ್ಥಳ ಹಾಗೂ ದೇವಸ್ಥಾನವನ್ನು ಸ್ಯಾನಿಟೈಸೇಷನ್ ಮಾಡುವುದು, ದರ್ಶನಕ್ಕೆ ಬರುವ ಭಕ್ತರು ಕಡ್ಡಾಯ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದು, ಗಣಪತಿ ಪ್ರತಿಷ್ಠಾಪನೆ ಸಂದರ್ಭದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆಗೆ ಭಂಗ ಬಾರದಂತೆ ಕಾಪಾಡಬೇಕು. ಸರ್ಕಾರದ ಆದೇಶ ಪಾಲಿಸದಿದ್ದರೆ ಕಾನೂನು ಜರುಗಿಸಲಾಗುತ್ತದೆ ಎಂದು ತಿಳಿಸಿದರು. ಸಿಪಿಐ ವೀಣಾ ಉಪಸ್ಥಿತರಿದ್ದರು.