ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ
Team Udayavani, Feb 15, 2019, 7:31 AM IST
ತುಮಕೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿಶೇಷ ಗಿರಿಜನ ಉಪಯೋಜನೆಯಡಿ ಕಾಮಗಾರಿ ಗಳನ್ನು ಸುಮೋಟೋ ಅಧಿಕಾರವನ್ನು ಬಳಸಿ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳು ವಂತೆ ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ನಾರಾಯಣಮೂರ್ತಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಸಭೆ ಯಲ್ಲಿ ಮಾತನಾಡಿ, ವಿಶೇಷ ಗಿರಿಜನ ಉಪಯೋಜನೆ ಯಡಿ ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲು ಸಹಕಾರ ಸಿಗದೇ ಇದ್ದಲ್ಲಿ, ಸುಮೋಟೋ ಅಧಿಕಾರವನ್ನು ಬಳಸಿಕೊಂಡು ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು, ವಿಶೇಷ ಗಿರಿಜನ ಯೋಜನೆಯಲ್ಲಿ ಇರುವ ಅನುದಾನವನ್ನು ಬಳಕೆ ಮಾಡಲು ವಿಫಲವಾದರೆ ಕ್ರಿಮಿನಲ್ ಮೊಕದ್ದಮೆ ಹಾಗೂ ಇಲಾಖೆ ವಿಚಾರಣೆ ನಡೆಸಲು ಅವಕಾಶವಿದೆ. ಮಾರ್ಚ್ ಅಂತ್ಯಕ್ಕೆ ಕೆಲಸ ಮಾಡುವುದನ್ನು ಬಿಟ್ಟು ಪ್ರಗತಿ ಸಾಧಿಸಲು ಕೆಲಸ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಅನುದಾನ ಹಾಸ್ಟೆಲ್ಗೆ ಬಳಸಲು ಮನವಿ: ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಡಾ.ಜಿ.ಪಿ.ದೇವ ರಾಜು ಮಾತನಾಡಿ, ಸಮಾಜ ಕಲ್ಯಾಣ ಇಲಾಖೆ ಅನುದಾನಗಳಲ್ಲಿ ಉಳಿತಾಯವಾಗುವ ಅನುದಾನ ವನ್ನು ಹಾಸ್ಟೆಲ್ಗಳಿಗೆ ಮೂಲಸೌಕರ್ಯ ಕಲ್ಪಿಸಲು ಬಳಕೆ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸ್ಥಾಯಿ ಸಮಿತಿಯ ಸಭೆಯಲ್ಲಿ ಒಪ್ಪಿಗೆ ನೀಡಿ, ಹಾಸ್ಟೆಲ್ಗಳಲ್ಲಿ ಗುಣಮಟ್ಟದ ತಟ್ಟೆ ಲೋಟ, ಹಾಸಿಗೆ, ಬುಕ್ ರ್ಯಾಕ್, ಕಂಪ್ಯೂಟರ್ಗಳನ್ನು ಕೊಡಿಸಲು ಕ್ರಮವಹಿಸುವಂತೆ ಸೂಚಿಸಿದರು.
ಯಾವುದೇ ತರಬೇತಿ ನೀಡುತ್ತಿಲ್ಲ: ಜಿಲಾ ಪಂಚಾಯ್ತಿ ಸದಸ್ಯೆ ಪ್ರೇಮಾ ಮಾತನಾಡಿ, ವಿದ್ಯಾರ್ಥಿ ನಿಲಯಗಳಲ್ಲಿರುವ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದೃಷ್ಟಿಯಿಂದ ತರಬೇತಿ ನೀಡ ಲಾಗುತ್ತಿದೆಯೇ ಎಂದು ಪ್ರಶ್ನಿಸಿದ್ದಕ್ಕೆ ಉತ್ತರಿಸಿದ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಿ.ಪಿ. ದೇವರಾಜು ಎಸ್ಎಸ್ಎಲ್ಸಿ ವಿದ್ಯಾರ್ಥಿ ಗಳಿಗೆ ಅಲ್ಪಾವಧಿ ಶಿಕ್ಷಕರ ಮೂಲಕ ಮೂರು ವಿಷಯಗಳಿಗೆ ಕೋಚಿಂಗ್ ನೀಡ ಲಾಗುತ್ತಿದ್ದು, ಪಿಯುಸಿ ವಿದ್ಯಾರ್ಥಿಗಳಿಗೆ ಯಾವುದೇ ತರಬೇತಿ ನೀಡುತ್ತಿಲ್ಲ ಎಂದು ಸಭೆಗೆ ತಿಳಿಸಿದರು.
ಸಲಹೆ: ವಿದ್ಯಾರ್ಥಿಗಳ ಜೀವನದಲ್ಲಿ ಎಸ್ಎಸ್ಎಲ್ಸಿ, ಪಿಯುಸಿ ಪ್ರಮುಖ ಘಟ್ಟವಾಗಿದ್ದು, ಸ್ಪರ್ಧಾ ತ್ಮಕ ಪರೀಕ್ಷೆಗಳು ಇಂದು ಕಠಿಣವಾಗಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಂತೆ ಪಿಯುಸಿ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಇಲಾಖೆಯಿಂದ ನೀಡಬಹು ದಲ್ಲವೇ ಎಂದು ಸಲಹೆ ನೀಡಿದರು. ಇದಕ್ಕೆ ಉತ್ತರಿಸಿ ಜಂಟಿ ನಿರ್ದೇಶಕ ಜಿ.ಪಿ.ದೇವ ರಾಜು, ಸಮಾಜ ಕಲ್ಯಾಣ ಇಲಾಖೆಯಿಂದ ಯಾವುದೇ ಸೌಲಭ್ಯವಿಲ್ಲ, ಜಿಪಂನಿಂದ ಅನುದಾನ ನೀಡಿದರೆ ತರಬೇತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಆರೋಪ: ಜಿಪಂ ಸದಸ್ಯ ವೈ.ಎಚ್.ಹುಚ್ಚಯ್ಯ ಮಾತ ನಾಡಿ, ತುಮಕೂರು ಜಿಲ್ಲೆಯಲ್ಲಿ ಕಾಡುಕುರುಬ, ಬೇಡ ಜಂಗಮ ಜಾತಿಗಳೇ ಇಲ್ಲ ಆದರೂ ಜಾತಿ ಪ್ರಮಾಣಪತ್ರವನ್ನು ವಿತರಿಸಲಾಗುತ್ತಿದ್ದು, ಅಧಿಕಾರಿ ಗಳು ಈ ಬಗ್ಗೆ ಗಮನಹರಿಸಿ ಕ್ರಮ ಕೈಗೊಳ್ಳಬೇಕು, ಪ್ರಬಲ ವ್ಯಕ್ತಿಗಳು ಸೌಲಭ್ಯವನ್ನು ಪಡೆದುಕೊಳ್ಳಲು ಇಂತಹ ಪ್ರಮಾಣ ಪತ್ರವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಕಳೆದ 5 ವರ್ಷಗಳ ಹಿಂದೆ ಕೊರೆದಿರುವ ಕೊಳವೆ ಬಾವಿಗಳಿಗೆ ಇದುವರೆಗೂ ವಿದ್ಯುತ್ ಸಂಪರ್ಕವನ್ನು ಕಲ್ಪಿಸದ ಸಣ್ಣನೀರಾವರಿ ಹಾಗೂ ಬೆಸ್ಕಾಂ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡ ವೈ.ಎಚ್. ಹುಚ್ಚಯ್ಯ, 5 ವರ್ಷದಿಂದ ಕೊರೆದ ಕೊಳವೆಬಾವಿಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸದೇ ಇದರೆ ಅಧಿಕಾರಿಗಳು ಏನು ಕೆಲಸ ಮಾಡು ತ್ತಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ ಎಂದರು.
ಪ್ರಕರಣ ದಾಖಲಿಸಬೇಕು: ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 2017-18ನೇ ಸಾಲಿನಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಗಂಗಾ ಕಲ್ಯಾಣ ಯೋಜನೆಗೆ ಆಯ್ಕೆಗೊಂಡ ಫಲಾನುಭವಿಗಳಿಗೆ ಕೊಳವೆಬಾವಿ ಕೊರೆಸಲು ಇನ್ನು ಸಾಧ್ಯವಾಗಿಲ್ಲ, ಅಧಿಕಾರಿಗಳು ಶಾಸಕರು ಅಡ್ಡಿ ಪಡಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಡೀಸಿ, ಜಿಪಂ ಸಿಇಒ ಹೇಳಿದರು. ಕೊಳವೆಬಾವಿ ಕೊರೆಸಿಲ್ಲ, ಸರ್ಕಾರದ ಕೆಲಸಕ್ಕೆ ಅಡ್ಡಿ ಪಡಿಸುತ್ತಿರುವ ಶಾಸಕ ಗೌರಿಶಂಕರ್ ಮೇಲೆ ಐಪಿಸಿ 553ರಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.
ಪರಿಶಿಷ್ಟ ಸಮುದಾಯದ ಅಭಿವೃದ್ಧಿಗೆ ವಿರುದ್ಧ ವಾಗಿರುವ ಶಾಸಕ ಡಿ.ಸಿ.ಗೌರಿಶಂಕರ್ ಸರ್ಕಾರಿ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದಾರೆ, ಸರ್ಕಾರಿ ಯೋಜನೆ ಅನುಷ್ಠಾನಕ್ಕೆ ಅಡ್ಡಿಪಡಿಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ನಡವಳಿ ಬರೆಯಬೇಕು ಎಂದು ಒತ್ತಾಯಿಸಿದರು.