ಭೂ ಪರಿಹಾರ ದರ ನಿಗದಿಗೆ ಸಿಎಂ ಜತೆ ಚರ್ಚೆ
Team Udayavani, Jun 17, 2020, 7:07 AM IST
ತುಮಕೂರು: ಎತ್ತಿನ ಹೊಳೆಯ ಬೈರಗೊಂಡ್ಲು ಜಲಾಶಯದ ನಿರ್ಮಾಣಕ್ಕೆ ಭೂಸ್ವಾಧೀನಕ್ಕೊಳಪಡುವ ರೈತರ ಜಮೀನಿಗೆ ಸೂಕ್ತ ಪರಿಹಾರ ದರ ನಿಗದಿ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಎತ್ತಿನಹೊಳೆ ಕುಡಿವ ನೀರಿನ ಯೋಜನೆಗಾಗಿ ಕೊರಟಗೆರೆ ತಾಲೂಕು ವ್ಯಾಪ್ತಿಯಲ್ಲಿ ಬರುವ ಬೈರಗೊಂಡ್ಲು ಜಲಾಶಯ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.
ಎಕರೆಗೆ 32 ಲಕ್ಷ ರೂ. ಪರಿಹಾರ: ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಕೊರಟಗೆರೆ, ದೊಡ್ಡಬಳ್ಳಾಪುರ ತಾಲೂಕಿನ ರೈತರ ಜಮೀನು ಭೂಸ್ವಾಧೀನವಾಗುತ್ತಿದ್ದು, ದೊಡ್ಡಬಳ್ಳಾ ಪುರ ತಾಲೂಕಿನ ರೈತರಿಗೆ ನೀಡುತ್ತಿರುವ ಪ್ರತಿ ಎಕರೆಗೆ 32 ಲಕ್ಷ ರೂ.ಗಳ ಪರಿಹಾರ ದರದಂತೆ ಕೊರಟಗೆರೆ ತಾಲೂಕಿನ ರೈತರಿಗೂ ದೊರೆಯ ಬೇಕೆನ್ನುವುದು ನನ್ನ ಆಶಯವಾಗಿದೆ ಎಂದರು.
ರೈತರು ಸಹಕರಿಸಿ: ಈ ನಿಟ್ಟಿನಲ್ಲಿ ಸಭೆಯಲ್ಲಿ ವ್ಯಕ್ತವಾಗಿರುವ ಬೇಡಿಕೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸರ್ಕಾರದ ಮಟ್ಟದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಯೋಜನೆ ಪೂರ್ಣಗೊಳಿಸಲು ಜನಪ್ರತಿ ನಿಧಿಗಳು ಹಾಗೂ ಆ ಭಾಗದ ರೈತರು ಸಹಕರಿಸಬೇಕೆಂದು ಮನವಿ ಮಾಡಿದರು.
ಅಧಿಕಾರಿಗಳಿಗೆ ಸೂಚನೆ: ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಯೋಜನೆಗೆ ಭೂಸ್ವಾಧೀನವಾಗುವ ಜಿಲ್ಲೆಯ ತಿಪಟೂರು, ಚಿಕ್ಕನಾಯಕನಹಳ್ಳಿ ತಾಲೂಕು ಸೇರಿದಂತೆ ಇತರೆ ಕಡೆ ರೈತರಿಗೆ ನೋಟಿಸ್ ನೀಡಿರುವುದಿಲ್ಲ. ನಿಯಮಾನುಸಾರ ರೈತರಿಗೆ ಭೂ-ಪರಿಹಾರ ನೀಡುವುದು ತಡವಾದರೂ ಸಹ ಮೊದಲು ನೋಟಿಸ್ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರಿಹಾರ ನೀಡಲು ಆಗ್ರಹ: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಮಾತ ನಾಡಿ, ಬೈರಗೊಂಡ್ಲು ಜಲಾಶಯವು ದೊಡ್ಡ ಬಳ್ಳಾಪುರ ಹಾಗೂ ಕೊರಟಗೆರೆ ತಾಲೂಕಿನ ಪ್ರದೇಶಗಳಲ್ಲಿ ನಿರ್ಮಾಣವಾಗುತ್ತಿದ್ದು, ಪಕ್ಕದ ತಾಲೂಕಿನ ರೈತರಿಗೆ ನೀಡುವ ಪರಿಹಾರ ಧನದ ಪ್ರಮಾಣದಲ್ಲಿಯೇ ನಮ್ಮ ತಾಲೂಕಿನ ರೈತರಿಗೂ ಪರಿಹಾರವನ್ನು ಸರ್ಕಾರ ನೀಡಬೇಕು ಎಂದರು.
ಕ್ಯಾಬಿನೆಟ್ನಲ್ಲಿ ಪ್ರಸ್ತಾಪ: ಕಳೆದ ಸರ್ಕಾರ ದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಎತ್ತಿನ ಹೊಳೆ ಯೋಜನೆಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಭೂಪರಿಹಾರ ದರವನ್ನು ನಿಗದಿಪಡಿಸುವ ಬಗ್ಗೆ ಜಿಲ್ಲಾಧಿಕಾರಿ ಗಳಿಂದ ಸೂಕ್ತ ಪ್ರಸ್ತಾವನೆ ಪಡೆದು ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡಬೇಕೆಂದು ತೀರ್ಮಾನಿಸ ಲಾಗಿತ್ತು. ಅದರಂತೆ ಜಲಾಶಯ ನಿರ್ಮಾಣ ದಿಂದ ಈ ಭಾಗಕ್ಕೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಜನಪ್ರತಿನಿಧಿಗಳೆಲ್ಲರೂ ರೈತರ ಮನವೊಲಿಸಿದ್ದಾಗಿದೆ.
ಜಲಾಶಯದ ಕಾಮಗಾರಿಗಾಗಿ ಬೈರ ಗೊಂಡ್ಲು ಗ್ರಾಮ ಸುತ್ತಮುತ್ತಲಿನ 5 ಹಳ್ಳಿಗಳು ಮುಳುಗಡೆಯಾಗಿ ಸ್ಥಳಾಂತರಗೊಳ್ಳಲಿದ್ದು, ಹೆಚ್ಚುವರಿಯಾಗಿ 350 ಕೋಟಿ ರೂ.ಗಳ ಭೂ ಪರಿಹಾರವನ್ನು ನಮ್ಮ ಭಾಗದ ರೈತರಿಗೆ ದೊರೆಯಬೇಕು. ಪ್ರತಿ ಎಕರೆಗೆ 32 ಲಕ್ಷ ರೂ. ಭೂ ಪರಿಹಾರ ಒದಗಿಸುವ ಕುರಿತು ಮುಖ್ಯಮಂತ್ರಿಗಳ ಮನವೊಲಿಸಬೇಕೆಂದು ಸಚಿವರಿಗೆ ಮನವಿ ಮಾಡಿದರು.
ಜಲಸಂಪನ್ಮೂಲ ಇಲಾಖೆಯ ಅಪರ ಕಾರ್ಯ ದರ್ಶಿ ರಾಕೇಶ್ಸಿಂಗ್, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ಕುಮಾರ್, ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಡಾ.ವಂಸಿಕೃಷ್ಣ, ಅಪರ ಜಿಲ್ಲಾಧಿ ಕಾರಿ ಕೆ.ಚೆನ್ನಬಸಪ್ಪ, ಮಧುಗಿರಿ ಉಪವಿಭಾ ಗಾಧಿಕಾರಿ ನಂದಿನಿ, ವಿಶೇಷ ಭೂಸ್ವಾಧೀನಾಧಿ ಕಾರಿಗಳಾದ ಚಂದ್ರಶೇಖರ್ ಇದ್ದರು.
ಅಭಿವೃದ್ಧಿ ಕಾಮಗಾರಿ ಮುಂದುವರಿಸಿ..: ಬೈರಗೊಂಡ್ಲು ಸುತ್ತಮುತ್ತಲಿನ ಗ್ರಾಮಗಳ ರಸ್ತೆ, ಚರಂಡಿ, ಮತ್ತಿತರ ಮೂಲಭೂತ ಸೌಕರ್ಯದ ಕಾಮಗಾರಿಗಳಿಗಾಗಿ 150 ಕೋಟಿ ರೂ.ಗಳ ಮಂಜೂರಾತಿ ನೀಡಲಾಗಿತ್ತು. ಈ ಪೈಕಿ ಮೊದಲನೇ ಹಂತದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಇನ್ನುಳಿದ 100 ಕೋಟಿ ರೂ.ಗಳನ್ನು ತಡೆಹಿಡಿಯದೆ ಬಿಡುಗಡೆ ಮಾಡಿ ಆ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿ ಮುಂದುವರಿಸಬೇಕು ಎಂದು ಶಾಸಕ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ
Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ