ಅತ್ಯಾಚಾರ, ಕೊಲೆ ಖಂಡಿಸಿ ಪ್ರತಿಭಟನೆ
Team Udayavani, Oct 6, 2020, 3:21 PM IST
ತುಮಕೂರು: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣವನ್ನು ಖಂಡಿಸಿ, ಆರೋಪಿಗಳಿಗೆ ಉಗ್ರ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಹಾಗೂ ದಲಿತ ಸಂಘಟನೆಗಳ ಒಕ್ಕೂಟ ದಿಂದ ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಅತ್ಯಾಚಾರ ನಡೆಸಿರುವ ಆರೋಪಿಗಳು, ಆಕೆಯ ಕೈ ಕಾಲ ಮುರಿದು, ನಾಲಿಗೆ ಕತ್ತರಿಸಿ ಸತ್ಯ ನುಡಿಯದಂತೆ ಮಾಡಿರುವುದು ನಾಗರಿಕಸಮಾಜ ತಲೆ ತಗ್ಗಿಸುವಂತಹ ವಿಚಾರವಾಗಿದೆ,ಕೂಡಲೇ ಸರ್ಕಾರ ಸಂತಸ್ತರು ನೀಡಿದ ಮರಣ ಪೂರ್ವ ಹೇಳಿಕೆಯನ್ನು ಪರಿಗಣಿಸಿ ಬಂಧಿಸಿರುವ ನಾಲ್ವರು ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪ್ರಕರಣದ ದಾರಿ ತಪ್ಪಿಸಲುಹೊರಟಿರುವ ಪೊಲೀಸರು ಮತ್ತು ವೈದ್ಯಕೀಯ ಸಿಬ್ಬಂದಿಯ ನಡೆ ಅನುಮಾನಾಸ್ಪದವಾಗಿದ್ದು, ಪ್ರಕರಣವನ್ನು ಕೂಲಂಕಷ ತನಿಖೆಗೆ ಒಳಪಡಿಸಬೇಕು ಎಂದು ಸಂಘದ ರಾಜ್ಯಾಧ್ಯಕ್ಷ ಅರ್ಜುನ್ ಪಾಳ್ಳೆಗಾರ್ ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಎಚ್.ಜಿ.ರಂಗನಾಥ್ ಮಾತನಾಡಿ, ಉತ್ತರದ ಪ್ರದೇಶದಲ್ಲಿ ದಲಿತರು, ದಲಿತ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ 10 ದಿನಗಳಲ್ಲಿ15ಕ್ಕೂ ಹೆಚ್ಚು ದಲಿತ ಹೆಣ್ಣು ಮಕ್ಕಳ ಅತ್ಯಾಚಾರ, ಕೊಲೆ ಪ್ರಕರಣಗಳು ದಾಖಲಾಗಿವೆ.ಕೇಂದ್ರ ಸರಕಾರ ಯೋಗಿ ಆದಿತ್ಯನಾಥ್ ಸರಕಾರವನ್ನು ವಜಾಗೊಳಿಸಬೇ ಕೆಂದು ಆಗ್ರಹಿಸಿದರು. ಜಿಲ್ಲಾ ಗೌರವಾಧ್ಯಕ್ಷ ಮಧುಸೂ ದನ್, ಹರೀಶ್, ವಿನೋದ್, ರಾಜಣ್ಣ ಇದ್ದರು.
ಯುಪಿ ಸರ್ಕಾರ ವಜಾಗೊಳಿಸಿ: ಡೀಸಿಗೆ ಮನವಿ :
ತುಮಕೂರು: ಕೇಂದ್ರ ಸರ್ಕಾರ ಉತ್ತರ ಪ್ರದೇಶ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಹೇರಬೇಕು ಎಂದು ಒತ್ತಾಯಿಸಿ ಬಹುಜನ ಸಮಾಜ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಿಎಸ್ಪಿ ಜಿಲ್ಲಾಧ್ಯಕ್ಷ ಮಹಮದ್ ಹಾಸೀಮ್ ಇಕ್ಬಾಲ್ ಮಾತನಾಡಿ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದಲಿತರು, ದಲಿತ ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ದೌರ್ಜನ್ಯ ಪ್ರಕರಣಗಳನ್ನು ನಿಭಾಯಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ ಮಾತನಾಡಿ, ಮುಖ್ಯಮಂತ್ರಿ ಆದಿತ್ಯನಾಥ ಸರ್ಕಾರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹತೋಟಿಯಲ್ಲಿಡುವಲ್ಲಿ ವಿಫಲವಾಗಿದೆ. ಸಾಕ್ಷ್ಯಗಳನ್ನು ನಾಶ ಪಡಿಸಿರುವ ಪೊಲೀಸರನ್ನುಸೇವೆಯಿಂದ ವಜಾ ಮಾಡಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಸ್ತುವಾರಿಗಳಾದ ಸೂಲಯ್ಯ, ರುದ್ರಪ್ಪ, ವಕೀಲರಾದ ರಂಗರಾಜು, ಮುಖಂಡರಾದ ಶಿವಕುಮಾರ್ ಮತ್ತಿತರರು ಭಾಗವಹಿಸಿದ್ದರು.