ಕುಂದಾಪುರ: ನಿವೇಶನ ರಹಿತರ ಬೃಹತ್ ಸಮಾವೇಶ
Team Udayavani, Mar 15, 2017, 4:33 PM IST
ಕುಂದಾಪುರ: ಅಖೀಲ ಭಾರತ ಕೃಷಿ ಕೂಲಿಕಾರರ ಸಂಘಕ್ಕೆ ಸಂಯೋಜಿಸಲ್ಪಟ್ಟ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಸಮಿತಿ ಹಾಗೂ ಕುಂದಾಪುರ ಪುರಸಭಾ ವ್ಯಾಪ್ತಿ ನಿವೇಶನ ರಹಿತರ ಹೋರಾಟ ಸಮಿತಿಗಳ ನೇತೃತ್ವದಲ್ಲಿ -ಕುಂದಾಪುರ ಪುರಸಭಾ ವ್ಯಾಪ್ತಿಯ ಮನೆ ನಿವೇಶನ ರಹಿತರ ಬೃಹತ್ ಸಮಾವೇಶವು ಕುಂದಾಪುರ ಕಾರ್ಮಿಕ ಭವನದಲ್ಲಿ ಜರಗಿತು.
ಕುಂದಾಪುರ ಪುರಸಭಾ ವ್ಯಾಪ್ತಿಯ ನಿವೇಶನ ರಹಿತರ ಹೋರಾಟ ಸಮಿತಿ ಸಂಚಾಲಕರು, ಹಾಗೂ ಸಿಐಟಿಯು ಕುಂದಾಪುರ ತಾಲೂಕು ಅಧ್ಯಕ್ಷ ಎಚ್. ನರಸಿಂಹ ಅವರು ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿ, ಪುರಸಭಾ ವ್ಯಾಪ್ತಿಯಲ್ಲಿ ಬಡನಿವೇಶನ ರಹಿತ ಅರ್ಜಿದಾರರು ನಿವೇಶನ ಕೋರಿ ಅರ್ಜಿ ಸಲ್ಲಿಸಿ- ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸಿ ವರ್ಷ ಎರಡು ಕಳೆದರೂ ಮನೆ ನಿವೇಶನ ರಹಿತರಿಗೆ-ನಿವೇಶನ ಸ್ಥಳ ಮಂಜೂರು ಮಾಡುವುದಕ್ಕೆ ಪುರಸಭಾ ಆಡಳಿತವು ಮೀನಮೇಷ ಎಣಿಸುತ್ತಿರುವುದನ್ನು ಬಲವಾಗಿ ಖಂಡಿಸಿದರು. ಪುರಸಭಾ ವ್ಯಾಪ್ತಿಯಲ್ಲಿ ಸರಕಾರಿ ಜಾಗ ಗುರುತಿಸಬೇಕು. ಇಲ್ಲದೇ ಖಾಸಗಿ ಜಾಗ ಖರೀದಿಸುವುದಕ್ಕೆ ಕೂಡಲೇ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಗೆ ನಿವೇದನೆ ಮಾಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರಾಸ್ತಾವಿಕ ಭಾಷಣ ಮಾಡಿದರು. ನಿವೇಶನ ರಹಿತರ ಸಮಾವೇಶದಲ್ಲಿ ಧಿ ಕೃಷಿ ಕೂಲಿಕಾರರ ಸಂಘದ ಮುಖಂಡ ಯು. ದಾಸಭಂಡಾರಿ, ರಾಜೀವ ಪಡುಕೋಣೆ, ನಾಗರತ್ನ ನಾಡ, ಪದ್ಮಾವತಿ ಶೆಟ್ಟಿ, ಕುಶಲ, ಶೀಲಾವತಿ, ಉಪಸ್ಥಿತರಿದ್ದರು.