ಹದಗೆಟ್ಟ ಮೊಗೇರಿ- ಸೂರೆಬೆಟ್ಟು ರಸ್ತೆ
Team Udayavani, Jul 12, 2019, 5:46 AM IST
ಬೈಂದೂರು: ಕೆರ್ಗಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗೇರಿ-ಸೂರೆಬೆಟ್ಟು ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚಾರ ದುಸ್ತರವಾಗಿದೆ.
ಶಾಲಾ ಮಕ್ಕಳು ಸೇರಿದಂತೆ ಸಾರ್ವಜನಿಕರು ಈ ರಸ್ತೆಯಲ್ಲಿ ನಡೆದಾಡುವುದಕ್ಕೆ ಕಷ್ಟ ಪಡುವ ಸ್ಥಿತಿ ಇದ್ದು ಆಡಳಿತ ವ್ಯವಸ್ಥೆಗೆ ಹಿಡಿಶಾಪ ಹಾಕುತ್ತಿದ್ದಾರೆ.
ರಸ್ತೆಗೆ ಹಾಕಿದ ಮಣ್ಣಿನಿಂದಾಗಿ ಮಳೆಗಾಲದಲ್ಲಿ ರಸ್ತೆ ಸಂಪೂರ್ಣ ಕೆಸರುಮಯವಾಗಿದೆ. ವಾಹನಗಳು ಸಂಚರಿಸುತ್ತಿರುವಾಗ ವಿದ್ಯಾರ್ಥಿಗಳಿಗೆ ಕೆಸರಿನ ಅಭಿಷೇಕವಾಗುತ್ತದೆ. ಕಾಲ್ನಡಿಗೆಯಲ್ಲಿ ಸಾಗುವವರ ಗತಿ ದೇವರಿಗೇ ಪ್ರೀತಿ ಎನ್ನುವಂತಾಗಿದೆ ಎನ್ನುವುದು ಗ್ರಾಮಸ್ಥರ ಅಳಲು.
ದುರಸ್ತಿ ಮಾಡಿಕೊಡುವಂತೆ ಸಂಬಂಧಿಸಿದ ಅಧಿಕಾರಿಗಳು, ಇಲಾಖೆ ಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಇನ್ನಾದರೂ ಆಡಳಿತ ವ್ಯವಸ್ಥೆ ಎಚ್ಚೆತ್ತು ಅಗತ್ಯ ಕ್ರಮಕೈಗೊಳ್ಳಬೇಕೆಂಬುದು ಸಾರ್ವಜನಿಕರ ಆಗ್ರಹ.