ಉಡುಪಿ: ಪೋಕ್ಸೋ ಪ್ರಕರಣ: ಆರೋಪಿಗೆ ಷರತ್ತುಬದ್ಧ ಜಾಮೀನು
Team Udayavani, Sep 8, 2022, 8:07 PM IST
ಉಡುಪಿ: ಪೋಕ್ಸೋ ಪ್ರಕರಣದ ಆರೋಪಿಗೆ ಉಡುಪಿ ಜಿಲ್ಲಾ ಮತ್ತು ಸತ್ರ ನಾಯಾಧೀಶರು ಷರತ್ತುಬದ್ಧ ಜಾಮೀನು ಮಂಜೂರುಗೊಳಿಸಿ ಆದೇಶಿಸಿದ್ದಾರೆ.
ಆರೋಪಿಯು ಸಂತ್ರಸ್ತ ಬಾಲಕಿಯ ದೂರದ ಸಂಬಂಧಿಯಾಗಿದ್ದು, ಸುಮಾರು 3 ವರ್ಷದ ಹಿಂದೆ ಬಾಲಕಿಯನ್ನು ಪರಿಚಯಿಸಿಕೊಂಡು ದೂರವಾಣಿ ಮೂಲಕ ಮಾತುಕತೆ ನಡೆಸುತ್ತಿದ್ದರು. ಅನಂತರ ಆತ ಆಕೆಯನ್ನು ಹೆಬ್ರಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಯಾರೂ ಇಲ್ಲದ ಸಮಯದಲ್ಲಿ ಮದುವೆ ಮಾಡಿಕೊಂಡಿದ್ದ. ಅನಂತರ ಆಕೆಯನ್ನು ಹೊಸಪೇಟೆಗೆ ಕರೆದುಕೊಂಡು ಹೋಗಿ ದೈಹಿಕ ಸಂಪರ್ಕ ನಡೆಸಿರುವುದು ತನಿಖೆಯಿಂದ ದೃಢಪಟ್ಟಿದೆ.
ಈ ಬಗ್ಗೆ ಮಹಿಳಾ ಪೊಲೀಸ್ ನಿರೀಕ್ಷಕರು ಪೋಕ್ಸೋ ನ್ಯಾಯಾಲಯಕ್ಕೆ ದೋಷರೋಪಣ ಪತ್ರ ಸಲ್ಲಿಸಿದ್ದರು. ಅದರಂತೆ ಆರೋಪಿ ಕೆಂಜೂರು ನಿವಾಸಿ ಕೀರ್ತಿ ವಿರುದ್ಧ ಅಂತಿಮ ವರದಿ/ದೋಷರೋಪಣ ಪಟ್ಟಿ ಬ್ರಹ್ಮಾವರ ವೃತ್ತ ನಿರೀಕ್ಷಕರ ಹಾಗೂ ಹಿರಿಯಡಕ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿ 34 ಸಾಕ್ಷಿಗಳೊಂದಿಗೆ ಜಿಲ್ಲಾ ಪೋಕ್ಸೋ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲಾಗಿತ್ತು.
ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಅವರು ಆರೋಪಿಯ ಜಾಮೀನು ಅರ್ಜಿ ಗುರುವಾರ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ನೀಡಿದೆ. 1ಲ.ರೂ.ವೈಯಕ್ತಿಕ ಬಾಂಡ್ ಮತ್ತು ಎರಡು ಜಾಮೀನುದಾರರೊಂದಿಗೆ ಜಾಮೀನು ಮಂಜೂರು ಮಾಡಿದೆ. ಮುಂದಿನ ವಿಚಾರಣೆ ಸೆ.23ಕ್ಕೆ ಮುಂದೂಡಲಾಗಿದೆ. ಆರೋಪಿಯ ಪರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಿರಿಯ ನ್ಯಾಯವಾದಿ ಶಿರಿಯಾರ ಪ್ರಭಾಕರ ನಾಯಕ್ ವಾದಿಸಿದ್ದರು.