ದೇವಸ್ಥಾನ ಪ್ರಸಾದ: ಮುನ್ನೆಚ್ಚರಿಕೆಗೆ ಉಡುಪಿ ಡಿಸಿ ಸೂಚನೆ
Team Udayavani, Dec 22, 2018, 10:09 AM IST
ಉಡುಪಿ: ಜಿಲ್ಲೆಯ ದೇವಸ್ಥಾನಗಳಲ್ಲಿ ಅನ್ನಪ್ರಸಾದ ಸೇರಿದಂತೆ ಪ್ರಸಾದ ತಯಾರಿ, ವಿತರಣೆ ಸಂದರ್ಭ ಅಗತ್ಯ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಎಲ್ಲ ದೇಗುಲಗಳ ಆಡಳಿತ ಮಂಡಳಿಯ ಮುಖ್ಯಸ್ಥರಿಗೆ ಕಾರ್ಯಾಗಾರ ಏರ್ಪಡಿಸಿ ಮಾಹಿತಿ ನೀಡಬೇಕು ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚನೆ ನೀಡಿದ್ದಾರೆ.
ಶುಕ್ರವಾರ ಜಿಲ್ಲಾ ಮಟ್ಟದ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಸಲಹಾ ಸಮಿತಿ ಸಭೆ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಾದ, ದಾಸೋಹ ತಯಾರಿಸುವ ಅಡುಗೆ ಕೋಣೆ ಗಳಿಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಅನಧಿ ಕೃತ ವ್ಯಕ್ತಿಗಳು ಪ್ರವೇಶಿಸದಂತೆ ನಿಗಾ ವಹಿಸ ಬೇಕು. ತಯಾರಿಸಿರುವ ನೈವೇದ್ಯ, ಪ್ರಸಾದ, ಅಡುಗೆ ಸ್ವೀಕರಿಸಲು ಯೋಗ್ಯವಾಗಿರುವ ಬಗ್ಗೆ ಖಚಿತ ಪಡಿಸಿ ಅನಂತರ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದರು.
ಬಿಸಿಯೂಟ ಗುಣಮಟ್ಟ
ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಕೆಗೆ ಬಳಸುವ ಪದಾರ್ಥಗಳ ಗುಣಮಟ್ಟದ ಕುರಿತು ಆಹಾರ ಸುರಕ್ಷತಾ ಅಧಿಕಾರಿಗಳು ಆಗಿಂದಾಗ್ಗೆ ಭೇಟಿ ನೀಡಿ ಪರಿಶೀಲಿಸಬೇಕು. ಆಹಾರ ಪದಾರ್ಥಗಳು ಸರಬರಾಜಾಗುವ ಗೋಡೌನ್ಗಳಿಗೂ ಭೇಟಿ ನೀಡಿ ಸುರಕ್ಷತಾ ಕ್ರಮ ಮತ್ತು ಅಲ್ಲಿರುವ ಆಹಾರ ಪದಾರ್ಥಗಳ ಗುಣಮಟ್ಟ ಕುರಿತು ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ಪ್ರಿಯಾಂಕಾ ಸೂಚಿಸಿದರು.
ಮೀನು ಸಾಗಾಟ ಪ್ರಮಾಣಪತ್ರ
ಜಿಲ್ಲೆಯಿಂದ ಗೋವಾಕ್ಕೆ ಮೀನು ಸಾಗಾಟ ವಾಹನಗಳ ಮಾಲಕರು ಆಹಾರ ಸುರಕ್ಷತಾ ಅಧಿ ಕಾರಿಗಳಿಂದ ಪ್ರಮಾಣ ಪತ್ರ ಪಡೆಯಬೇಕು. ನಗರಸಭೆ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ದಾಳಿ ನಡೆಸುವ ಸಂದರ್ಭ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಬೀಚ್ಗಳಲ್ಲಿ “ಧೂಮಪಾನ ನಿಷೇಧಿತ ಪ್ರದೇಶ’ ಎಂಬ ಸೂಚನಾ ಫಲಕ ಹಾಗೂ ಉಲ್ಲಂಸಿದರೆ ದಂಡ ವಿಧಿಸುವ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು ಎಂದು ಸೂಚಿಸಿದರು.
2,61,990 ರೂ. ದಂಡ ವಸೂಲಿ
ಜಿಲ್ಲೆಯಲ್ಲಿ ನವೆಂಬರ್ ಅಂತ್ಯದವರೆಗೆ ಪೊಲೀಸ್ ಇಲಾಖೆ ಮತ್ತು ಇತರೆ ಇಲಾಖೆಗಳ ಕೋಟಾ³ ನಿಯಂತ್ರಣ ದಳದಿಂದ ಒಟ್ಟು 1,938 ಕಾನೂನು ಉಲ್ಲಂಘನೆ ಪ್ರಕರಣಗಳಲ್ಲಿ 2,61,990 ರೂ. ದಂಡ ವಸೂಲಿ ಮಾಡಲಾಗಿದೆ. 46 ಶಾಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರೋಹಿಣಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.