ಇಂದು ತ್ರಾಸಿಯಲ್ಲಿ ಮತ ಜಾಗೃತಿ : ಪೂರ್ವಭಾವಿ ಸಭೆ
Team Udayavani, Apr 20, 2019, 6:01 AM IST
ಕುಂದಾಪುರ: ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಯುಕ್ತ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತ್ರಾಸಿಯ ಕಡಲ ಕಿನಾರೆಯಲ್ಲಿ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಸ್ವೀಪ್ ಸಮಿತಿಯ ವತಿಯಿಂದ ಬೃಹತ್ ಮತದಾನ ಜಾಗೃತಿ ಕಾರ್ಯಕ್ರಮ ಎ. 20 ರಂದು ಸಂಜೆ 4 ಕ್ಕೆ ನಡೆಯಲಿದ್ದು, ಈ ಸಂಬಂಧ ಶುಕ್ರವಾರ ತ್ರಾಸಿ ಗ್ರಾ.ಪಂ. ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಕಿರಣ್ ಪೆಡೆ°àಕರ್ ಮಾಹಿತಿ ನೀಡಿ, ಈ ಜಾಗೃತಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೋರ್ಲಪಾಟಿ, ಎಸ್ಪಿ ನಿಶಾ ಜೇಮ್ಸ್, ಸ್ವೀಪ್ ಸಮಿತಿ ಅಧ್ಯಕ್ಷೆ, ಜಿ.ಪಂ. ಸಿಇಒ ಸಿಂಧೂ ರಾಣಿ, ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಎಸ್. ಎಸ್. ಮಧುಕೇಶ್ವರ್ ಮತ್ತಿತರರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಗಾಳಿಪಟ ಹಾರಿಸುವುದು, ಮಾನವ ಸರಪಳಿ, ಡೋಲು ಬಾರಿಸುವುದು ಹಾಗೂ ವಿವಿಧ ಚಟುವಟಿಕೆಗಳ ಮೂಲಕ ಮತದಾನದ ಕುರಿತು ಜಾಗೃತಿ ಮೂಡಿಸಲಾಗುವುದು ಎಂದವರು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರಂಜನ್ ಭಟ್, ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾ.ಪಂ. ಪಿಡಿಒಗಳು ಭಾಗವಹಿಸಿದ್ದರು.