ಟ್ಯಾಂಕರ್ ಮೂಲಕ ನೀರು ಪೂರೈಸಲು ಆದೇಶ
ಬಜೆ ಅಣೆಕಟ್ಟೆಗೆ ಸಂಸದೆ, ಶಾಸಕ ಭೇಟಿ
Team Udayavani, Jun 3, 2019, 6:10 AM IST
ಉಡುಪಿ: ನಗರದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಕೆ. ರಘುಪತಿ ಭಟ್ ಅವರು ರವಿವಾರ ಬಜೆ ಅಣೆಕಟ್ಟೆಗೆ ಭೇಟಿ ನೀಡಿ ನೀರಿನ ಮಟ್ಟ ಹಾಗೂ ಪಂಪ್ ಆಳವಡಿಸಿರುವ ಕುರಿತು ಪರಿಶೀಲನೆ ನಡೆಸಿದರು.
ಸಂಸದೆ ಮಾತನಾಡಿ, ಬಜೆಯಲ್ಲಿ ಆರು ದಿನಕ್ಕಾಗುವಷ್ಟು ಮಾತ್ರ ನೀರು ಲಭ್ಯವಿದೆ. ಅನಂತರ ದಿನದಲ್ಲಿ ನಗರದ ಜನತೆಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಈ ನಿಟ್ಟಿನಲ್ಲಿ ನಗರಸಭೆ ವ್ಯಾಪ್ತಿಯ 35 ವಾರ್ಡ್ಗಳಿಗೆ ಹಣ ನೀಡಿ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಆದೇಶ ನೀಡಿದರು.
ಶಾಸಕರು ಮಾತನಾಡಿ, ಈ ಬಾರಿ ಅಣೆಕಟ್ಟಿನ ಹೊಳೆತ್ತುವುದರಿಂದ ಮುಂದಿನ ಬೇಸಗೆಯಲ್ಲಿ ನೀರಿನ ಸಮಸ್ಯೆ ಕಾಡಲಾರದು. ನೀರು ಹರಿವಿಗೆ ಇದ್ದ ಅಡೆತಡೆಯನ್ನು ಸರಿಪಡಿಸಲಾಗಿದ್ದು, ನೀರು ಸರಾಗವಾಗಿ ಹರಿದು ಬಂದು ಅಣೆಕಟ್ಟಿನಲ್ಲಿ ಶೇಖರಣೆಯಾಗಲಿದೆ ಎಂದರು. ಜಿಂ.ಪಂ. ಅಧ್ಯಕ್ಷ ದಿನಕರ್ ಬಾಬು, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ನಗರಸಭೆ ಸದಸ್ಯರು, ಅಧಿಕಾರಿಗಳು, ಬಿಜೆಪಿ ಪ್ರ. ಕಾರ್ಯದರ್ಶಿ ಯಶ್ಪಾಲ್ ಸುವರ್ಣ, ಪ್ರವೀಣ್ ಕುಮಾರ್ ಶೆಟ್ಟಿ, ನಗರಾಧ್ಯಕ್ಷ ಪ್ರಭಾಕರ್ ಪೂಜಾರಿ ಉಪಸ್ಥಿತರಿದ್ದರು.