ಕೈಗಾರಿಕೆಗಳಿಗೆ ನೀಡಬೇಕಿದೆ ಹೆಚ್ಚಿನ ಆದ್ಯತೆ: ಶೆಟ್ಟರ
Team Udayavani, Jun 20, 2020, 11:31 AM IST
ಕಾರವಾರ: ಬಂದರು ಮತ್ತು ಏರ್ಪೋರ್ಟ್ ನಿರ್ಮಾಣದಿಂದ ಮುಂದಿನ ದಿನಗಳಲ್ಲಿ ಕಾರವಾರದ ಚಿತ್ರಣವೇ ಬದಲಾಗಿ, ಅಭಿವೃದ್ಧಿಯ ವೇಗ ಪಡೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೈಗಾರಿಕೋದ್ಯಮಿಗಳು ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಜಿಲ್ಲೆಯ ಅಂಕೋಲಾ ತಾಲೂಕಿನ ಬೇಲೇಕೇರಿ ಬಂದರು ಅಭಿವೃದ್ಧಿಗೊಳಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಕೂಡ ಆಸಕ್ತಿ ತೋರಿಸಿದ್ದು, ಬಂದರು ನಿರ್ಮಾಣಕ್ಕೆ ಪ್ರಸ್ತಾವನೆ ಕಳಿಸಲು ಹೇಳಿದ್ದಾರೆ. ಬೇಲೇಕೇರಿ ಬಂದರು ಹಾಗೂ ವಿಮಾನ ನಿಲ್ದಾಣ ನಿರ್ಮಾಣ ಸಂಬಂಧಿಸಿದಂತೆ ಈಗಾಗಲೇ ಸ್ಥಳ ಪರಿಶೀಲಿಸಲಾಗಿದ್ದು, ಶೀಘ್ರದಲ್ಲೇ ಸರಕಾರದ ಮಟ್ಟದಲ್ಲಿ ಒಂದು ನಿರ್ಣಯಕ್ಕೆ ಬರಲಾಗುವುದು ಎಂದರು.
ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚು ಆದ್ಯತೆ ನೀಡಬೇಕಾಗಿದೆ. ಅದರಲ್ಲೂ ಹಿಂದುಳಿದ ತಾಲೂಕುಗಳಿಗೆ ಆದ್ಯತೆ ನೀಡಿ ಕೈಗಾರಿಕೆ ಸ್ಥಾಪಿಸುವ ಉದ್ದೇಶವಿದೆ. ಇದರಿಂದ ಉತ್ತಕ ಕನ್ನಡ ಜಿಲ್ಲೆಗೆ ಮಾತ್ರವಲ್ಲದೇ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಿಗೂ ಅನುಕೂಲವಾಗಲಿದೆ. ಇಂಡಸ್ಟ್ರೀಗಳೆಂದರೇ ಬೆಂಗಳೂರಿಗೆ ಮಾತ್ರ ಸಿಮೀತವಾದಂತೆ ಕೇಂದ್ರಿಕೃತವಾಗಿದ್ದು, ಆ ಯೋಚನೆಯಿಂದ ಹೊರ ಬರಬೇಕಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್, ಶಾಸಕರಾದ ರೂಪಾಲಿ ನಾಯ್ಕ, ದಿನಕರ ಶೆಟ್ಟಿ, ಮೂಲಸೌಲಭ್ಯ ಪ್ರಧಾನ ಕಾರ್ಯದರ್ಶಿ ಕಪಿಲ್ ಮೋಹನ್, ಜಿಲ್ಲಾಧಿಕಾರಿ ಡಾ| ಹರೀಶ ಕುಮಾರ ಕೆ., ಜಿ.ಪಂ. ಸಿಇಒ ಎಂ. ರೋಷನ್, ಅಪರ ಜಿಲ್ಲಾಧಿಕಾರಿ ನಾಗರಾಜ್ ಸಿಂಗ್ರೇರ್ ಸೇರಿದಂತೆ ಇತರರು ಇದ್ದರು.