ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಸಮ್ಮಿಶ್ರ ಸರ್ಕಾರದಲ್ಲಿ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ
Team Udayavani, Jul 10, 2019, 1:12 PM IST
ಯಾದಗಿರಿ: ನಗರದ ಸುಭಾಷ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಯಾದಗಿರಿ: ಸಮ್ಮಿಶ್ರ ಸರ್ಕಾರದಲ್ಲಿ ಅವರ ಪಕ್ಷದ ಶಾಸಕರು ಮತ್ತು ಸಚಿವರು ಸರ್ಕಾರದ ವಿರುದ್ಧ ಅಸಮಾಧಾನದಿಂದ ತಾವಾಗಿಯೇ ತಮ್ಮ ಸ್ಥಾನಗಳನ್ನು ತ್ಯಜಿಸುತ್ತಿರುವುದು ಸಂಖ್ಯಾಬಲ ಕಳೆದುಕೊಂಡಿರುವ ಮುಖ್ಯಮಂತ್ರಿ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಆಗ್ರಹಿಸಿದರು.
ನಗರದ ಸುಭಾಷ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ನೇತೃತ್ವದಲ್ಲಿ ಸರ್ಕಾರ ವಿರುದ್ಧ ನಡೆದ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು.
ರಾಜ್ಯದ ಜನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸುವ ಮೂಲಕ 105 ಸ್ಥಾನಗಳನ್ನು ಗೆಲ್ಲಿಸಿ ಜನಾದೇಶ ನೀಡಿದರೂ, ಅಧಿಕಾರದ ದಾಹದಿಂದ ಜೆಡಿಎಸ್-ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡಿದೆ ಎಂದರು. ಸಮ್ಮಿಶ್ರ ಸರ್ಕಾರಕ್ಕೆ ಜನಮನ್ನಣೆಯಿಲ್ಲ. ಆದರೂ ಕೂಡ ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡಿದ್ದಾರೆಂದು ವ್ಯಂಗ್ಯವಾಡಿದರು.
ಈ ಸರ್ಕಾರದಲ್ಲಿ ಯಾವುದೇ ಜನಪರ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಮುಖ್ಯಮಂತ್ರಿಗಳು ರೆಸಾರ್ಟ್ನಿಂದ ಕಳೆದ ತಿಂಗಳಷ್ಟೇ ಗ್ರಾಮ ವಾಸ್ತವ್ಯಕ್ಕೆ ಮರಳಿದ್ದಾರೆ ಎಂದರು. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಮುಸುಕಿನ ಗುದ್ದಾಟದಿಂದ ರಾಜ್ಯದ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ತಕ್ಷಣವೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ರಾಜ್ಯದಲ್ಲಿ ಪರಸ್ಪರ ಸಮ್ಮಿಶ್ರ ಸರ್ಕಾರದ ಶಾಸಕರಲ್ಲಿ ಅತೃಪ್ತಿಯಿಂದ ರಾಜೀನಾಮೆ ಪರ್ವ ನಡೆಯುತ್ತಿದೆ. ಇಂತಹದಲ್ಲಿ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ ಎಂದರು.
ಈ ವೇಳೆ ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ, ಸದಸ್ವತಾ ಅಭಿಯಾನದ ಜಿಲ್ಲಾ ಸಂಚಾಲಕ ಶರಣಗೌಡ ಬಾಡಿಯಾಳ, ಡಾ| ಶರಣರಡ್ಡಿ ಕೋಡ್ಲಾ, ಚನ್ನಾರೆಡ್ಡಿಗೌಡ, ಖಂಡಪ್ಪ ದಾಸನ್, ಹಣಮಂತ ಇಟಗಿ, ಅಂಬಯ್ಯ ಶಾಬಾದಿ, ವೆಂಕಟರಡ್ಡಿ ಅಬ್ಬೆತುಮಕೂರು ಇನ್ನಿತರರು ಇದ್ದರು.