ಸೌಲಭ್ಯ ಪಡೆದು ಅಭಿವೃದ್ಧಿ ಸಾಧಿಸಿ: ಪ್ರಭಾಕರ
ಸರ್ಕಾರಿ ಯೋಜನೆ ಗ್ರಾಮೀಣ ಮಹಿಳೆಯರಿಗೆ ತಿಳಿಸಿ
Team Udayavani, Jul 7, 2019, 5:18 PM IST
ಯಾದಗಿರಿ: ನಗರದ ಸರ್ಕಾರಿ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಸಾಮರ್ಥ್ಯ ಬಲವರ್ಧನೆ ತರಬೇತಿ ಕಾರ್ಯಾಗಾರವನ್ನು ಸಿಡಿಪಿಒ ರಾಧಾ ಮಣ್ಣೂರ ಜ್ಯೋತಿ ಬೆಳಗಿ ಉದ್ಘಾಟಿಸಿದರು.
ಯಾದಗಿರಿ: ಮಹಿಳೆಯರಿಗಾಗಿ ಸರ್ಕಾರದ ಹಲವಾರು ಸೌಲಭ್ಯಗಳಿದ್ದು, ಅವುಗಳ ಸದುಪಯೋಗ ಪಡೆದು ಅಭಿವೃದ್ಧಿ ಸಾಧಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಭಾಕರ ಸಲಹೆ ನೀಡಿದರು.
ನಗರದ ಸರ್ಕಾರಿ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಶನಿವಾರ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಮಹಿಳಾ ಶಕ್ತಿ ಕೇಂದ್ರ ಯೋಜನೆಯಡಿ ಸ್ವಯಂ ಸೇವಕಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಎರಡು ದಿನಗಳ ಸಾಮರ್ಥ್ಯ ಬಲವರ್ಧನೆ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಿಳಾ ಶಕ್ತಿ ಯೋಜನೆಯಡಿ ಮಹಿಳೆಯರು ಸ್ವಯಂ ಸೇವಕರ ಪಾತ್ರ ಯಾರಿಗೆ ಅವಶ್ಯಕತೆ ಇದೆಯೊ ಅಂತಹ ಮಹಿಳೆಯರಿಗೆ ಸಹಾಯವಾಗುವಂತೆ ಸ್ವಯಂ ಸೇವಕರು ಕೆಲಸ ಮಾಡಬೇಕು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಗ್ರಾಮೀಣ ಮಹಿಳೆಯರಿಗೆ ತಿಳಿಸಬೇಕು ಎಂದು ಹೇಳಿದರು.
ಉಪ ತಹಶೀಲ್ದಾರ್ ನರಸಿಂಹಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಂದು ರಂಗದಲ್ಲಿ ಮಹಿಳೆಯರು ಅಭಿವೃದ್ಧಿ ಹೊಂದಲು ಮಹಿಳಾ ಶಕ್ತಿ ಯೋಜನೆ ಸಹಕಾರಿಯಾಗಿದೆ ಎಂದು ಹೇಳಿದರು.
ಸರಕಾರಿ ಪದವಿ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲ ಶ್ರೀನಿವಾಸರಾವ್ ದೊಡ್ಡಮನಿ ಮಾತನಾಡಿ, ಮಹಿಳೆಯರು ಸರ್ಕಾರದ ಸೌಲಭ್ಯಗಳು ಮಡೆದುಕೊಂಡು ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜಿ. ಮಣ್ಣೂರು ಮಾತನಾಡಿ, ಮಹಿಳೆಯರು ಸಹ ಪುರಷರಷ್ಟೇ ಸಮಾನರಾಗಿದ್ದಾರೆ ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಮಹಿಳೆಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.
ಮಹಿಳಾ ಕಲ್ಯಾಣ ಅಧಿಕಾರಿ ಬಸಲಿಂಗಮ್ಮ ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಮಾಹಿತಿ ನೀಡಿದರು. ಅಭಿವೃದ್ಧಿ ನಿರೀಕ್ಷಕಿ ಉಷಾ ಬಳಗನೂರ್, ರಾಯಚೂರು ಮಹಿಳಾ ಶಕ್ತಿ ಕೇಂದ್ರ ಯೋಜನೆಯ ಮಹಿಳಾ ಕಲ್ಯಾಣ ಅಧಿಕಾರಿ ಗಿರೀಜಾ, ಡಾ| ಹರೀಶ ರಾಠೊಡ ಭಾಗವಹಿಸಿದ್ದರು. ಮಹಿಳಾ ಶಕ್ತಿ ಕೇಂದ್ರ ಯೋಜನೆ ಜಿಲ್ಲಾ ಸಂಯೋಜಕಿ ಫಾತೀಮಾ ಕಾರ್ಯಕ್ರಮ ನಿರೂಪಿಸಿದರು.