ವಿಳಂಬ ಮಾಡದೇ ಕಾಮಗಾರಿಗಳ ಪ್ರಗತಿ ಸಾಧಿಸಿ
Team Udayavani, Dec 16, 2021, 4:21 PM IST
ಯಾದಗಿರಿ: ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಅಧಿಕಾರಿಗಳು ವಿಳಂಬ ಮಾಡದೇ ಪ್ರಗತಿ ಸಾಧಿಸಲು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್ ಸೂಚಿಸಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.
ಈ ಯೋಜನೆಯಡಿ ಆವರಣ ಗೋಡೆ, ಶಾಲಾ ಕಟ್ಟಡ ನಿರ್ಮಾಣ, ದುರಸ್ತಿ, ರಸ್ತೆ, ಸಮುದಾನ ಭವನ, ಬಸ್ ಶೆಟ್ಟರ್, ದೇವಸ್ಥಾನಗಳ ದುರಸ್ತಿ, ಮತ್ತಿತರ ಸಣ್ಣಪುಟ್ಟ ಕಾಮಗಾರಿಗಳನ್ನು ಕೈಗೊಂಡು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಅಪ್ಲೋಡ್ ಮಾಡಿ
ಅಧಿಕಾರಿ, ಎಂಜಿನಿಯರ್ಗಳು ನಿಗದಿತ ಅವಧಿಯೊಳಗೆ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಆ ಕಾಮಗಾರಿಗಳ ಪ್ರಗತಿ ಮೇಲೆ ಕಣ್ಣಿಡಲು ವರ್ಕ್ಸಾಫ್ಟ್ (ಗಾಂಧಿ ಸಾಕ್ಷಿ) ಎಂಬ ತಂತ್ರಾಂಶವನ್ನು ಹೊಸದಾಗಿ ಸೃಜಿಸಲಾಗಿದೆ. ಶಾಸಕರ ನಿಧಿಯಡಿ ಕೈಗೊಳ್ಳಲಾಗುವ ಕಾಮಗಾರಿಗಳ ಪ್ರಗತಿಯನ್ನು ಕಡ್ಡಾಯವಾಗಿ ಈ ತಂತ್ರಾಂಶದಲ್ಲಿ ಅಪ್ಲೋಡ್ ಮಾಡಬೇಕು ಎಂದು ಸೂಚಿಸಿದರು.
ಶಾಸಕರು ಪ್ರಸ್ತಾವನೆ ಸಲ್ಲಿಸಿದ ನಿಗದಿತ ದಿನದೊಳಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು. ಕಾರಣಾಂತರಗಳಿಂದ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗದಿದ್ದ ಸಂದರ್ಭದಲ್ಲಿ ಸೂಕ್ತ ಕಾರಣ ನೀಡಿ ಶಾಸಕರಿಗೆ ಸ್ಪಷ್ಟನೆ ನೀಡಬೇಕು. ಪ್ರಗತಿ ಸಾಧಿಸದೆ ಉದಾಸೀನ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಶಾಸಕರು ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಲ್ಲಿಸಿದಲ್ಲಿ ನಿಗದಿತ ದಿನದೊಳಗಾಗಿ ಸಹಾಯಕ ಆಯುಕ್ತರು ಆಡಳಿತಾತ್ಮಕ ಅನುಮೋದನೆ ನೀಡಬೇಕು. ಶಾಸಕರ ನಿಧಿಯಡಿ ಕೈಗೊಳ್ಳುವ ಕಾಮಗಾರಿಗಳಿಗೆ ನಿಗದಿತ ಸಮಯದೊಳಗಾಗಿ ಪೂರ್ಣ ಗೊಳಿಸಬೇಕೆಂಬ ನಿಯಮವಿದೆ. ಅಧಿಕಾರಿಗಳು ಕಟ್ಟುನಿಟ್ಟಾಗಿ ಈ ನಿಯಮ ಪಾಲಿಸಬೇಕು ಎಂದರು.
ಪಂಚಾಯತ ರಾಜ್ ಇಂಜಿನಿಯರಿಂಗ್, ಪಿಡಬ್ಲ್ಯೂಡಿ ಇಲಾಖೆ, ನಿರ್ಮಿತಿ ಕೇಂದ್ರ, ಕೆಆರ್ ಐಡಿಎಲ್, ವಿಕಲಚೇತನಾ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳಲ್ಲಿನ ಕಾಮಗಾರಿಗಳನ್ನು ತ್ವರಿತ ಗತಿಯಲ್ಲಿ ಪ್ರಗತಿ ಸಾಧಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.