ಸಮಾಜಮುಖೀ ಚಿಂತನೆಯಡಿ ನಿವೃತ್ತಿ ಜೀವನ ಸಾಗಲಿ
Team Udayavani, Dec 4, 2018, 2:30 PM IST
ಶಹಾಪುರ: ಮೌಲ್ಯಯುತ ಶಿಕ್ಷಣ ನೀಡುತ್ತಾ ಶಿಕ್ಷಣ ರಂಗದಲ್ಲಿ ಹಲವಾರು ಚೇತನಗಳಿಗೆ ಸ್ಫೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾಗುವ ಶಿಕ್ಷಕರು ತಮ್ಮ ನಿವೃತ್ತಿ ಜೀವನವನ್ನು ಸಮಾಜಮುಖೀ ಚಿಂತನೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬದುಕು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗುರುಲಿಂಗಪ್ಪ ಮಿಣಜಗಿ ಹೇಳಿದರು.
ತಾಲೂಕಿನ ಚಾಮನಾಳ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶಶಿಕಾಂತ ಚಾಮನಾಳ ಅವರ ವಯೋ ನಿವೃತ್ತಿ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಬೋಧನಾ ಕೌಶಲ್ಯದಿಂದ ಶಿಕ್ಷಣ ರಂಗದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಸರ್ವರೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಸಾರ್ಥಕ ಸೇವೆ ಸಲ್ಲಿಸಿದ ಚಾಮನಾಳ ಅವರ ಸೇವೆ ಇಲಾಖೆಗೆ ತೃಪ್ತಿ ತಂದಿದೆ. ಅವರ ಮುಂದಿನ ನಿವೃತ್ತಿ ಜೀವನವನ್ನು ಬಯಸಿ ಬಂದ ವಿದ್ಯಾರ್ಥಿಗಳಿಗೆ ಹಾಗೂ ಕಿರಿಯ ಉಪನ್ಯಾಸಕರಿಗೆ ಮಾರ್ಗದರ್ಶನ ನೀಡುವ ಮೂಲಕ ಶಿಕ್ಷಣ ರಂಗದಲ್ಲಿ ಮಾರ್ಗದರ್ಶಕರಾಗಿ ಸಮಾಜಮುಖೀ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಶಿಕಾಂತ ಚಾಮನಾಳ, ಮಕ್ಕಳೊಂದಿಗೆ ಕಳೆದ ದಿನಗಳು, ಅವರನ್ನು ಶೈಕ್ಷಣಿಕವಾಗಿ ಸಾಮಾಜಿಕವಾಗಿ ತಿದ್ದಿ ಬೆಳೆಸಿದ ಸಾರ್ಥಕ ಸೇವೆ ಸಲ್ಲಿಸಿದ ತೃಪ್ತಿ ನನಗಿದೆ ಎಂದು ತಮ್ಮ ಸೇವೆಯ ದಿನಗಳನ್ನು ಸ್ಮರಿಸಿಕೊಂಡರು.
ಸಮಾರಂಭದ ಸಾನ್ನಿಧ್ಯವನ್ನು ಸ್ಥಳೀಯ ಸಿದ್ಧಲಿಂಗಮಠದ ಬಸ್ಸಯ್ಯಸ್ವಾಮೀಜಿ ವಹಿಸಿದ್ದರು. ಯುವ ಮುಖಂಡ ಸಂಜೀವರೆಡ್ಡಿ ದರ್ಶನಾಪುರ, ಶಹಾಪುರ ಬಾಲಕಿಯರ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಎನ್.ಸಿ. ಪಾಟೀಲ, ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ| ಅಬ್ದುಲ್ ಕರೀಂ ಕನ್ಯಾಕೋಳೂರ, ಚರಬಸವೇಶ್ವರ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಧರ್ಮಣ್ಣಗೌಡ ಬಿರಾದಾರ, ಬಸಲಿಂಗಪ್ಪ ಸಾಹು ವಿದ್ಯಾ ಸಂಸ್ಥೆ ಅಧ್ಯಕ್ಷ ಶಿವಮಹಾಂತಪ್ಪ ಸಾಹು ಇದ್ದರು. ಉಪನ್ಯಾಸಕ ಅಯ್ಯಣ್ಣ ಇನಾಂದಾರ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಸಂತೋಷ ಜುನ್ನಾ ಸ್ವಾಗತಿಸಿ, ವಂದಿಸಿದರು. ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.