ನೀರಿನ ಸಮಸ್ಯೆಗೆ ಸ್ಪಂದಿಸಲು ಸೂಚನೆ
ಕೆರೆಗಳ ಒತ್ತುವರಿ ತೆರವು-ಸರ್ವೇಗೆ ಸೂಚನೆಸಮಸ್ಯೆ ನಿವಾರಣೆಗೆ ತಕ್ಷಣ ಕಾರ್ಯ ಪ್ರವೃತ್ತರಾಗಿ
Team Udayavani, Mar 8, 2020, 12:28 PM IST
ಯಾದಗಿರಿ: ಜಿಲ್ಲೆಯಲ್ಲಿನ ಎಲ್ಲ ಕೆರೆಗಳನ್ನು ಸರ್ವೇ ಮಾಡಿ ಗಡಿ ಗುರುತಿಸಬೇಕು. ಅತಿಕ್ರಮಣ ಮಾಡಿಕೊಂಡಿದ್ದರೆ ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ಸೂಚಿಸಿದರು. ಜಿ.ಪಂ ಸಭಾಂಗಣದಲ್ಲಿ ಶನಿವಾರ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಶಾಸಕ ನರಸಿಂಹ ನಾಯಕ ಮಾತನಾಡಿ, ಜಿಲ್ಲೆಯಲ್ಲಿನ ಸಾಕಷ್ಟು ಕೆರೆಗಳು ಒತ್ತುವರಿ ಆಗಿವೆ. ಕೆರೆಗಳ ಅತಿಕ್ರಮಣ ಮಾಡಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ವಿಶೇಷ ಕೋರ್ಟ್ ಇದ್ದು, ಕೆರೆಗಳನ್ನು ಸರ್ವೇ ಮಾಡಲು ಅಧಿಕಾರಿಗಳಿಗೆ ನಿರ್ದೇಶಿಸಲು ಮನವಿ ಮಾಡಿದ್ದಕ್ಕೆ ಸಚಿವರು ಸಂಬಂಧಿ ಸಿದ ಅಧಿ ಕಾರಿಗಳಿಗೆ ಸೂಚಿಸಿದರು.
ಕೆರೆಗಳ ಹೂಳೆತ್ತುವ ಕಾರ್ಯ ಜೈನ್ ಸಂಘಟನೆ ಸಹಯೋಗದೊಂದಿಗೆ ಯಶಸ್ವಿಯಾಗಿದ್ದು, ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಈ ಬಾರಿಯೂ ಹೆಚ್ಚಿನ ಕೆರೆಗಳನ್ನು ಹೂಳೆತ್ತಲು ಜಲಾಮೃತ ಯೋಜನೆ ಹಣವನ್ನು ಕೂಡ ಯೋಜನೆಗೆ ಬಳಸುವ ಬಗ್ಗೆ ಪರಿಶೀಲನೆ ನಡೆಸುವಂತೆ ಜಿ.ಪಂ ಸಿಇಒಗೆ ನಿರ್ದೇಶಿಸಿದರು.
ಇದಕ್ಕೂ ಮೊದಲು ಮಾತನಾಡಿದ ಸಚಿವರು, ಜಿಲ್ಲೆಯ 123 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದರೆ ತಕ್ಷಣ ಕಾರ್ಯಪ್ರವೃತ್ತರಾಗಿ ಒಂದೆರಡು ದಿನಗಳಲ್ಲಿ ಪರಿಹರಿಸಬೇಕು. ಇಲ್ಲವಾದಲ್ಲಿ ಆಯಾ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್ ಮತ್ತು ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿರ್ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮಾರ್ಚ್, ಏಪ್ರಿಲ್, ಮೇ ಹಾಗೂ ಜೂನ್ ತಿಂಗಳುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು. ಆದ್ದರಿಂದ ಸಮಸ್ಯೆ ಕಂಡು ಬರುವ ಹಳ್ಳಿಗಳ ಪಟ್ಟಿ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು, ಜನಪ್ರತಿನಿಧಿಗಳು, ಪತ್ರಿಕೆ ಅಥವಾ ಯಾವುದೇ ಮೂಲಗಳಿಂದ ಕುಡಿಯುವ ನೀರಿನ ತೊಂದರೆ ಇರುವುದಾಗಿ ಕಂಡು ಬಂದಲ್ಲಿ ತಕ್ಷಣ ಸ್ಪಂದಿಸಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರಬೇಕು. ಮೊಬೈಲ್ ಸ್ವಿಚ್ ಆಫ್ ಮಾಡಬಾರದು ಎಂದು ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಬೇಕು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಬರುವ ಸೋಮವಾರ ಕುಡಿಯುವ ನೀರು ಮತ್ತು ಸ್ವಚ್ಛ ಭಾರತ್ ಕುರಿತಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ, ವರದಿ ನೀಡುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭಿಸಲಾಗಿದೆ. ಹಣ ಪಾವತಿ ಬಾಕಿ ಇದ್ದಲ್ಲಿ ಪರಿಶೀಲಿಸಿ, ಕ್ರಮ ಕೈಗೊಳ್ಳ ಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಮುಂದಿನ ಸಭೆ ಹೊತ್ತಿಗೆ ವಿವಿಧ ಇಲಾಖೆಗಳಿಂದ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಪರಿಹಾರ ನೀಡುವಲ್ಲಿ ವಿಳಂಬ ಮಾಡಬಾರದು. ಫಲಾನುಭವಿಗಳಿಗೆ ಸೌಲಭ್ಯ ಒದಗಿಸುವಲ್ಲಿ ಅಕ್ರಮ ಎಸಗಿದರೆ ತಕ್ಷಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು. ಸಭೆಗೆ ಗೈರಾದ ಡಿಡಿಪಿಐ ಹಾಗೂ ಇತರೆ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಿದರು.
ಲೋಕಸಭಾ ಸದಸ್ಯ ರಾಜಾ ಅಮರೇಶ್ವರ ನಾಯಕ ಮಾತನಾಡಿ, ಕೊರೊನಾ ವೈರಸ್ ಜಾಗೃತಿ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಭೆ ನಡೆಸಬೇಕು. ಗ್ರಾಮಗಳಲ್ಲಿ ಡಂಗೂರ ಸಾರಬೇಕು. ಬಿಸಿಲು ಹೆಚ್ಚಾಗಿರುವ ಕಾರಣ ಈ ವೈರಸ್ ಹರಡುವುದಿಲ್ಲ. ಜನರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು. ಜನ ಔಷಧ ಕೇಂದ್ರಗಳಲ್ಲಿ ಶೇ. 50ರಿಂದ 80ರಷ್ಟು ಕಡಿಮೆ ಬೆಲೆಯಲ್ಲಿ ಔಷ ಧ ಲಭ್ಯವಿರುವುದರಿಂದ ಸಾರ್ವಜನಿಕರಿಗೆ ತಿಳಿವಳಿಕೆ ನೀಡಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಸೊಳ್ಳೆ ಕಾಟ ತಡೆಗಾಗಿ ಫಾಗಿಂಗ್ ಮಷೀನ್ ಖರೀದಿಸಲಾಗಿದ್ದು, ಗ್ರಾಮ ಪಂಚಾಯಿತಿಗಳಿಗೆ ವಿತರಿಸಲಾಗುವುದು ಎಂದು ತಿಳಿಸಿದರು. ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ನೋಂದಣಿಯಲ್ಲಿ ಜಿಲ್ಲೆಯು ಪ್ರಥಮ ಸ್ಥಾನದಲ್ಲಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|
ಮಲ್ಲನಗೌಡ ಎಸ್. ಪಾಟೀಲ ತಿಳಿಸಿದರು.
ಲೋಕೋಪಯೋಗಿ ಇಲಾಖೆಯ ದೇವಿದಾಸ ಚವ್ಹಾಣ ಮಾತನಾಡಿ, ಪ್ರವಾಹದಲ್ಲಿ ಹಾಳಾಗಿದ್ದ 11 ರಸ್ತೆ ಹಾಗೂ 6 ಸೇತುವೆಗಳ ದುರಸ್ತಿ ಕಾಮಗಾರಿಗಳಲ್ಲಿ ಈಗಾಗಲೇ 6 ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. 2019-20ನೇ ಸಾಲಿನ ಕೆಕೆಆರ್ಡಿಬಿ ಯೋಜನೆ ಅಡಿಯ ಒಟ್ಟು 159 ಕಾಮಗಾರಿಗಳಲ್ಲಿ 135 ಆರಂಭಿಸಲಾಗಿದೆ. ಇವುಗಳಲ್ಲಿ 30 ಪೂರ್ಣಗೊಂಡಿದ್ದು, 105 ಪ್ರಗತಿ ಹಂತದಲ್ಲಿವೆ ಎಂದು ಮಾಹಿತಿ ನೀಡಿದರು.
ಆಯುಷ್ ಇಲಾಖೆ ವಿವಿಧ ಆಯುಷ್ ಪದ್ಧತಿಗಳ ಪರಿಚಯ ಹಾಗೂ ಆರೋಗ್ಯ ಸಲಹಾ ಕೈಪಿಡಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಸೇರಿದಂತೆ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ
Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ
NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್ ನಿವಾಸಕ್ಕೆ ಬಂದ ಜಾಧವ್!
Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ