ನೀತಿ ಸಂಹಿತೆ ಉಲ್ಲಂಘನೆ ಆರೋಪ: ನಿಖಿಲ್ ವಿರುದ್ಧ ಬಿಜೆಪಿ ದೂರು
Team Udayavani, Mar 22, 2019, 1:44 AM IST
ಚಿಕ್ಕಮಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿಯಿಂದ ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅವರಿಗೆ ಗುರುವಾರ ದೂರು ಸಲ್ಲಿಸಲಾಗಿದೆ.
ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಕುಟುಂಬದವರೊಡನೆ ಜಿಲ್ಲೆಯ ಶೃಂಗೇರಿ ಶಂಕರ ಮಠಕ್ಕೆ ಬಂದಿದ್ದಾಗ ಮಠದ ಆವರಣದಲ್ಲಿಯೇ ಮಾಧ್ಯಮದವರೊಂದಿಗೆ ಮಾತನಾಡುವ ಮೂಲಕ ಚುನಾವಣ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ನಿಖೀಲ್ ಕುಮಾರಸ್ವಾಮಿ ಅವರೊಂದಿಗೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಹಾಜರಿದ್ದರು. ಕಾನೂನು ಕಾಪಾಡಬೇಕಾದವರೆ ಕಾನೂನು ಉಲ್ಲಂಘನೆ ಮಾಡುವುದು ಎಷ್ಟು ಸರಿ ಎಂದು ಬಿಜೆಪಿ ದೂರಿನಲ್ಲಿ ಪ್ರಶ್ನಿಸಿದೆ.