ಮಾರ್ಚ್ 4ಕ್ಕೆ ಮೈತ್ರಿ ಪಕ್ಷಗಳ ಸಮನ್ವಯ ಸಮಿತಿ ಸಭೆ
Team Udayavani, Feb 28, 2019, 1:26 AM IST
ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಚರ್ಚಿಸಲು ಮೈತ್ರಿ ಸರ್ಕಾರದ ಮಿತ್ರ ಪಕ್ಷಗಳ ಸಮನ್ವಯ ಸಮಿತಿ ಸಭೆ ಮಾರ್ಚ್ 4 ರಂದು ನಡೆಯಲಿದೆ.
ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಎರಡೂ ಪಕ್ಷಗಳ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿ ಪರಮೇಶ್ವರ್ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ನೇತೃತ್ವದಲ್ಲಿ ಈಗಾಗಲೇ ಮೊದಲ ಹಂತದ ಚರ್ಚೆ ನಡೆದಿದ್ದು, ಎರಡೂ ಪಕ್ಷಗಳು ಗೆಲ್ಲುವ ಸೂತ್ರದಡಿ ಹೊಂದಾಣಿಕೆ ಮೂಲಕ ಕ್ಷೇತ್ರ ಹಂಚಿಕೊಳ್ಳಲು ನಿರ್ಧರಿಸಿವೆ. ಮಾರ್ಚ್ 4ರಂದು ನಡೆಯುವ ಸಮನ್ವಯ ಸಮಿತಿ ಸಭೆಯಲ್ಲಿ ಯಾವ ಕ್ಷೇತ್ರವನ್ನು ಯಾರಿಗೆ ನೀಡಬೇಕು ಎಂಬ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಂದೇ ಕೆಲವು ಕ್ಷೇತ್ರಗಳ ಹಂಚಿಕೆ ಕೂಡ ನಿರ್ಧಾರವಾಗುವ ಸಾಧ್ಯತೆ ಇದೆ.
ಹಾಲಿ ಸಂಸದರಿರುವ ಕ್ಷೇತ್ರಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿರುವುದರಿಂದ ಈ ಬಗ್ಗೆ ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮಟ್ಟದಲ್ಲಿ ತೀರ್ಮಾನವಾಗಬೇಕೆಂಬ ನಿಲುವಿಗೆ ಬಂದಿದ್ದಾರೆ. ಹೀಗಾಗಿ, ಸಮನ್ವಯ ಸಮಿತಿಯಲ್ಲಿ ಬಗೆ ಹರಿಯದ ಕ್ಷೇತ್ರಗಳ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಇಬ್ಬರೂ ಒಂದು ಸುತ್ತಿನ ಮಾತುಕತೆ ನಡೆಸಿ, ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇಬ್ಬರ ನಡುವೆಯೂ ಹೊಂದಾಣಿಕೆಯಾಗದಿದ್ದಾಗಅಂತಿಮವಾಗಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗಿದೆ.