ಮೂರನೇ ಶಕ್ತಿಯಾಗಿ ಬಿಎಸ್ಪಿ: ಎನ್.ಮಹೇಶ್
Team Udayavani, Apr 2, 2019, 6:34 AM IST
ಮಂಡ್ಯ: ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿರುವ ಎನ್ಡಿಎ ಹಾಗೂ ಯುಪಿಎ ಪಕ್ಷಗಳ ಪರ್ಯಾಯವಾಗಿ ಬಹುಜನ ಸಮಾಜ ಪಕ್ಷ ದೇಶದ ಮೂರನೇ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಶಾಸಕ ಎನ್.ಮಹೇಶ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ಮೊದಲ ಹಂತದ ಚುನಾವಣೆಯಲ್ಲಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಲ್ಲೂ ಬಿಎಸ್ಪಿ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದರು.
ದೇಶದಲ್ಲಿ ಬಿಎಸ್ಪಿ ಸುಮಾರು 60 ರಿಂದ 70 ಸ್ಥಾನಗಳನ್ನು ಗೆಲ್ಲಲಿದೆ. ರಾಜ್ಯದಲ್ಲಿ 2ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ದೇಶದ ಆಡಳಿತದ ಚುಕ್ಕಾಣಿ ಹಿಡಿಯಲು ನಿರ್ಣಾಯಕ ಪಾತ್ರ ವಹಿಸಲಿದೆ ಎಂದರು. ಮಂಡ್ಯ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗೆ ಮೊದಲನೇ ಕ್ರಮ ಸಂಖ್ಯೆ ಬರಬೇಕಾಗಿತ್ತು. ಆದರೆ ಇಲ್ಲಿ ಕೆಲವು ಲೋಪದೋಷಗಳಾಗಿವೆ. ಅದನ್ನು ಸರಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗಗಳಿಗೆ ಪತ್ರ ಬರೆಯಲಾಗಿದ್ದು, ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದರು.