ಕನ್ನಡಿಗ ಪ್ರಧಾನಿ ಎಂಬ ಕುಮಾರ ಹೇಳಿಕೆ ಸರಿಯಲ್ಲ: ದೇವೇಗೌಡ
Team Udayavani, Mar 1, 2019, 1:17 AM IST
ಚಿಕ್ಕಮಗಳೂರು: ಕನ್ನಡಿಗರೊಬ್ಬರು ಪ್ರಧಾನಿಯಾಗುತ್ತಾರೆ ಎಂಬಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸರಿಯಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.
ಕಡೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ 20-22 ಸ್ಥಾನ ಗಳಿಸಿದರೆ ಕನ್ನಡಿಗರೊಬ್ಬರು ಪ್ರಧಾನಿಯಾಗುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಈಗ ಈ ಹೇಳಿಕೆ ನೀಡುವುದು ಸರಿಯಲ್ಲ. ಈ ಹಿಂದೆ ನಾನು ಪ್ರಧಾನಿಯಾಗಿದ್ದಾಗ ಪರಿಸ್ಥಿತಿಯೇ ಬೇರೆ ಇತ್ತು. ಆಗ ರಾಜ್ಯದಲ್ಲಿ ನಮ್ಮ ಪಕ್ಷ ಸ್ವಂತ ಬಲದಿಂದ ಸರ್ಕಾರ ರಚನೆ ಮಾಡಿತ್ತು. ಈಗ ಕಾಂಗ್ರೆಸ್ನೊಂದಿಗೆ ಸೇರಿ ಸರ್ಕಾರ ಮಾಡುತ್ತಿದ್ದೇವೆ. ರಾಷ್ಟ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕೆಂಬ ಉದ್ದೇಶದಿಂದ ಎಲ್ಲ ಪಕ್ಷಗಳೂ ಒಟ್ಟಾಗುತ್ತಿವೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಚುನಾವಣೆ ಎದುರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ರಾಹುಲ್ ಪ್ರಧಾನಿ ಅಭ್ಯರ್ಥಿ ಎಂಬ ಚರ್ಚೆಯೂ ನಡೆಯುತ್ತಿದೆ. ಆದರೆ, ಇದಕ್ಕೆ ಎಲ್ಲಾ ಪಕ್ಷಗಳ ಸಹಮತ ಬೇಕಾಗುತ್ತದೆ’ ಎಂದರು.