ನಾಗೇಂದ್ರ ಸಹೋದರ ಬಿಜೆಪಿಗೆ
Team Udayavani, Mar 20, 2019, 1:44 AM IST
ಬಳ್ಳಾರಿ: ಗಣಿನಾಡಲ್ಲಿ ಲೋಕಸಭಾ ಚುನಾವಣೆ ರಾಜಕೀಯ ಬಿರುಸುಗೊಂಡಿದೆ. ಬಳ್ಳಾರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಅವರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಮಂಗಳವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡರು.
ನಗರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ, ಶಾಲು, ಬಾವುಟ ನೀಡುವ ಮೂಲಕ ವೆಂಕಟೇಶ್ ಪ್ರಸಾದ್ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕಟೇಶ ಪ್ರಸಾದ್, ಪ್ರಧಾನಿ ಮೋದಿಯವರ ಆಡಳಿತ ಮೆಚ್ಚಿ ಬಿಜೆಪಿ ಸೇರಿದ್ದೇನೆ. ನಾನು ಬಳ್ಳಾರಿ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ನೀಡುವುದು ವರಿಷ್ಠರಿಗೆ ಬಿಟ್ಟ ವಿಚಾರ. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಶಾಸಕ ಶ್ರೀರಾಮುಲು ಭೇಟಿ ಮಾಡಿ ಚರ್ಚೆ ನಡೆಸಿ ಬಿಜೆಪಿಗೆ ಸೇರ್ಪಡೆಯಾಗಿದೇªನೆ. ನನಗೂ ಶಾಸಕ ನಾಗೇಂದ್ರಗೂ ರಾಜಕೀಯ ವಿಚಾರದಲ್ಲಿ ಯಾವುದೇ ಸಂಬಂಧವಿಲ್ಲ. ನಮ್ಮ ಕುಟುಂಬ ಒಂದೆ ಆದರೂ ನಿರ್ಧಾರಗಳು ಮಾತ್ರ ಬೇರೆ ಬೇರೆಯಾಗಿವೆ ಎಂದರು.
ನಾಗೇಂದ್ರ ಬಿಜೆಪಿಗೆ ಬರೋದು ನಿಶ್ಚಿತ’
ಬಳ್ಳಾರಿ: “ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರು ಬಿಜೆಪಿ ಸೇರಲು ಕೆಲ ತಾಂತ್ರಿಕ ತೊಂದರೆಗಳಿವೆ. ಅವುಗಳನ್ನು ಪರಿಹರಿಸಿಕೊಂಡ ಬಳಿಕ ಮರಳಿ ಮಾತೃಪಕ್ಷ ಬಿಜೆಪಿಗೆ ವಾಪಸ್ಸಾಗಲಿದ್ದಾರೆ’ ಎನ್ನುವ ಮೂಲಕ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಕಾಂಗ್ರೆಸ್ ಶಾಸಕರೊಬ್ಬರು ಬಿಜೆಪಿ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ನಾಗೇಂದ್ರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿರುವುದು ಸ್ವಾಗತಾರ್ಹ. ಅಣ್ಣ ಬಿಜೆಪಿಗೆ ಬಂದ ಬಳಿಕ ತಮ್ಮ ನಾಗೇಂದ್ರ ಸಹ ಜತೆಗೆ ಇದ್ದಂತೆ. ಅಲ್ಲದೆ, ನಾಗೇಂದ್ರ ಬಿಜೆಪಿ ಸೇರುವುದಕ್ಕೆ ಕೆಲ ತಾಂತ್ರಿಕ ತೊಂದರೆಗಳು ಎದುರಾಗಿದ್ದು, ಅವುಗಳನ್ನು ಬಗೆಹರಿಸಿಕೊಂಡ ಬಳಿಕ ಪಕ್ಷಕ್ಕೆ ವಾಪಸ್ಸಾಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಕೈ ಸೇರಲು ಯೋಗಾ ರಮೇಶ್ ನಿರ್ಧಾರ
ಹಾಸನ: ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್. ಯೋಗಾ ರಮೇಶ್ ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಮಂಗಳವಾರ ಭೇಟಿಯಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಲು ಅವಕಾಶ ನೀಡಬೇಕೆಂದು ಮನವಿ ಮಾಡಿದ್ದಾರೆ. ಎ.ಮಂಜು ರಾಜಕೀಯ ವಿರೋಧಿಯಾದ ಯೋಗಾ ರಮೇಶ್ ಅವರು ಎ.ಮಂಜು ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ ಬಿಜೆಪಿ ತ್ಯಜಿಸುವ ನಿರ್ಧಾರಕ್ಕೆ ಬಂದಿದ್ದಾರೆ.
ಅರಕಲಗೂಡು ತಾಲೂಕಿನ ಹೊನ್ನ ವಳ್ಳಿಯವರಾದ ಅವರು, ಅರಕಲಗೂಡು ವಿಧಾನಸಭಾ ಕ್ಷೇತ್ರದಲ್ಲಿ 2013 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಎ.ಮಂಜು ಅವರೆದರು ರಾಜಕೀಯವಾಗಿ ಸೆಣಸಾಡುತ್ತಲೇ ಬಂದಿದ್ದಾರೆ.