ಕೈ-ಜೆಡಿಎಸ್ ಮೈತ್ರಿಯಲ್ಲೂ ಮ್ಯಾಚ್ ಫಿಕ್ಸಿಂಗ್
Team Udayavani, Mar 17, 2019, 1:45 AM IST
ಚಿತ್ರದುರ್ಗ: ಕಾಂಗ್ರೆಸ್-ಜೆಡಿಎಸ್ ಮೈತ್ರಿಯನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವರು ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡು ವಿರೋಧಿಗಳಿಗೆ ಅನುಕೂಲ ಮಾಡಿಕೊಡುತ್ತಿದ್ದಾರೆ. ಈ ವಿಷಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಯವರ ಗಮನಕ್ಕೆ ತರಲಾಗಿದೆ ಎಂದು ಮಾಜಿ ಸಚಿವ ಕೆ. ಶಿವಮೂರ್ತಿ ನಾಯ್ಕ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅನಿವಾರ್ಯ. ಆದರೆ ಕೆಲವರು ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್μಕ್ಸಿಂಗ್ ಮಾಡಿಕೊಂಡರೆ ಎದುರಾಳಿಗಳಿಗೆ ಗೆಲುವು ಸುಲಭವಾಗಲಿದೆ. ರಾಜ್ಯದ ಐದು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಲ್ಲಿ ಯಾವುದೇ ಕಾರಣಕ್ಕೂ ಮ್ಯಾಚ್ ಫಿಕ್ಸಿಂಗ್ ಆಗಬಾರದು ಎನ್ನುವುದು ನಮ್ಮ ಉದ್ದೇಶ ಎಂದರು.
ರಾಜ್ಯದ ಮೀಸಲು ಕ್ಷೇತ್ರಗಳು ಒಂದೊಂದಾಗಿ ಕೈ ಬಿಡುತ್ತಿವೆ. ಇದಕ್ಕೆ ಮೂಲ ಕಾರಣ ಏನೆಂಬ ಬಗ್ಗೆ ಕಾಂಗ್ರೆಸ್ ವರಿಷ್ಠರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಪರಿಶಿಷ್ಟ ಜಾತಿಗಳಲ್ಲಿ 101 ಜಾತಿಗಳಿದ್ದು ಎಲ್ಲ ಜಾತಿಗಳಿಗೆ ಅವಕಾಶ ಸಿಗಬೇಕು ಎನ್ನುವುದು ನನ್ನ ಆಶಯ. ಈ ಸಮುದಾಯದವರು ಚುನಾವಣೆಯಲ್ಲಿ ಗೆಲ್ಲಬೇಕಾದರೆ ಬೇರೆ ಜಾತಿಯವರ ಬೆಂಬಲವೂ ಬೇಕು ಎಂದು ಹೇಳಿದರು.
ಟಿಕೆಟ್ ಆಕಾಂಕ್ಷಿ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷಿಗಳಲ್ಲಿ ನಾನೂ ಒಬ್ಬನಾಗಿದ್ದು, ಕ್ಷೇತ್ರದಲ್ಲಿ ಸಾಕಷ್ಟು ಹಿಡಿತ ಹೊಂದಿದ್ದೇನೆ. ಚಿತ್ರದುರ್ಗ ಕ್ಷೇತ್ರದಲ್ಲಿ ಮೂರು ಲಕ್ಷದಷ್ಟು ಲಂಬಾಣಿ ಸಮುದಾಯದವರಿದ್ದಾರೆ. ಪ್ರಜಾಪ್ರಭುತ್ವ ಪರಿಪೂರ್ಣವಾಗಬೇಕಾದರೆ ಎಲ್ಲ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದರು.