ಮಂಗಳೂರಿಗೆ ಇಂದು ಮೋದಿ ಆಗಮನ
Team Udayavani, Apr 13, 2019, 5:00 AM IST
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.13ರಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ, ಆತಿಥ್ಯ ಸಹಿತ ಸರ್ವ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ. ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದ್ದು, ಒಂದೂವರೆ ಲಕ್ಷ ಮಂದಿ ಕುಳಿತು ವೀಕ್ಷಿಸುವಂತಾಗಲು ಆಸನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ವಿಶೇಷ ಅಂದರೆ, ಈ ಬಾರಿ ಪ್ರಧಾನಿ ಮೋದಿ ಆಗಮನದ ಹಿನ್ನೆಲೆಯಲ್ಲಿ ನಗರದಲ್ಲಿ ಹಿಂದೆಂದಿಗಿಂತಲೂ ಅತ್ಯಧಿಕವಾದ ಗರಿಷ್ಠ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದರಲ್ಲಿಯೂ ಕಾರ್ಯಕ್ರಮ ನಡೆಯುವ ಮೈದಾನದ ಸುತ್ತಮುತ್ತ ಸಾಕಷ್ಟು ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ಅವರ ವಾಹನ ಹಾದು ಹೋಗುವ ರಸ್ತೆಗಳಲ್ಲಿಯೂ ಅತ್ಯಧಿಕ ಮಟ್ಟದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರಚಾರ ಸಭೆಗೆ ಬರುವವರನ್ನು ಮುಖ್ಯ ಪ್ರವೇಶ ದ್ವಾರ ಸಹಿತ ಒಟ್ಟು ಆರು ಕಡೆ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಮೋದಿ ಅವರು ಬಿಜೆಪಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದಕ್ಕಾಗಿ ಕೇಂದ್ರ ಮೈದಾನದ ಫುಟ್ಬಾಲ್ ಗ್ರೌಂಡ್ನಲ್ಲಿ 60 ಅಡಿ ಉದ್ದ, 40 ಅಡಿ ಅಗಲದ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.