ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ: ವೀಣಾ ಅಚ್ಚಯ್ಯ
ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ
Team Udayavani, Nov 18, 2019, 5:29 AM IST
ಮಡಿಕೇರಿ: ವಿದ್ಯಾರ್ಥಿಗಳು ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಓದಿದ ಮಕ್ಕಳು ಸಮಾಜದಲ್ಲಿ ಎತ್ತರದ ಸ್ಥಾನದಲ್ಲಿ ಇರುವುದನ್ನು ಕಾಣಬಹುದಾಗಿದೆ. ಅಂತಹ ಮಹಾನ್ ವ್ಯಕ್ತಿಗಳ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆದ್ದರಿಂದ ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಡಬೇಕು ಎಂದು ವೀಣಾ
ಅಚ್ಚಯ್ಯ ಹೇಳಿದರು.
ವಿದ್ಯಾರ್ಥಿಗಳು ಗುರು ಹಿರಿಯರನ್ನು ಗೌರವಿಸಬೇಕು. ವಿದ್ಯಾರ್ಥಿಗಳು ಶೃದ್ಧಾ ಭಕ್ತಿಯಿಂದ ಗುರಿ ತಲುಪಲು ಪ್ರಯತ್ನಿಸಬೇಕು. ಜವಾಬ್ದಾರಿಯನ್ನು ಬೇರೆಯವರ ಮೇಲೆ ಹೊರಿಸುವ ಪ್ರಯತ್ನ ಮಾಡಬಾರದು. ಆಗ ಮಾತ್ರ ಜೀವನದಲ್ಲಿ ಯಶಸ್ಸು ಸಿಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯರು ನುಡಿದರು.
ವಿದ್ಯಾರ್ಥಿಗಳು ಮೊಬೈಲ್ಗಳಿಂದ ದೂರವಿರಬೇಕು, ತಂತ್ರಜ್ಞಾನವನ್ನು ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಓದಿನ ಕಡೆಗೆ ಹೆಚ್ಚು ಗಮನವರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ ಅವರು ಸ್ವಾಗತಿಸಿದರು, ಉಪನ್ಯಾಸಕರಾದ ನಂದೀಶ್ ನಿರೂಪಿಸಿ, ವಂದಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎ.ಪಿ.ಧನಂಜಯ, ಸಮಿತಿ ಸದಸ್ಯರಾದ ಉಮಾದೇವಿ, ದೇವಕಿ, ತೀರ್ಪುಗಾರರು ಉಪನ್ಯಾಸಕರು ಉಪಸ್ತಿತರಿದ್ದರು
ಕೊಡಗು ಜಿಲ್ಲಾ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಮಹಾಲಿಂಗಯ್ಯ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಗುರುತಿಸಿ ಪೋ›ತ್ಸಾಹಿಸುವ ಕಾರ್ಯವಾಗಬೇಕು. ಪ್ರಯಿಯೊಬ್ಬರಿಗೂ ಅವರದೇ ಆದ ಪ್ರತಿಭೆ ಇರುತ್ತದೆ. ಅವರಿಗೆ ಸೂಕ್ತ ವೇದಿಕೆ ಒದಗಿಸುವಂತಾಗಬೇಕು ಎಂದರು. ಉನ್ನತ ಸ್ಥಾನ ಪಡೆಯಲು ಪರಿಶ್ರಮ ಅವಲಂಬಿತವಾಗಿದೆ ಪ್ರತಿಯೊಬ್ಬರು ಗೆಲುವಿನ ನಿರೀಕ್ಷೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾರೆ. ಆದರೆ ಎಲ್ಲರಿಗೂ ಗೆಲುವು ಸಿಗುವುದಿಲ್ಲ. ಸೋಲು ಗೆಲುವನ್ನು ಸಮಾನವಾಗಿ ಸ್ವಿಕರಿಸಿದಾಗ ಮಾತ್ರ ಜೀವನದಲ್ಲಿ ಯಶಸ್ಸು ಸಿಗುತ್ತದೆ ಎಂದು ಅವರು ಹೇಳಿದರು.