‘ಲಸಿಕೆಯಿಂದ ಮಕ್ಕಳು ವಂಚಿತರಾಗದಿರಲಿ
Team Udayavani, Aug 9, 2019, 5:00 AM IST
ಸ್ಟೇಟ್ಬ್ಯಾಂಕ್: ವಲಸೆ ಕಾರ್ಮಿಕರ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳು ರೋಟಾ ವೈರಸ್ ಲಸಿಕೆಯಿಂದ ವಂಚಿತರಾಗದಂತೆ ವಿಶೇಷ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸೂಚಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೋಟಾ ವೈರಸ್ ಲಸಿಕೆ ಮತ್ತು ಟಿಡಿ ಪರಿಚಯ ಕಾರ್ಯಕ್ರಮದಲ್ಲಿ ಅವರು ಗುರುವಾರ ಅಧ್ಯಕ್ಷತೆ ವಹಿಸಿದ್ದರು.
ಮಕ್ಕಳಲ್ಲಿ ಅತಿಸಾರ ಭೇದಿಉಂಟು ಮಾಡುವ ರೋಟಾ ವೈರಸ್ ನಿಯಂತ್ರಣಕ್ಕಾಗಿ ಮಕ್ಕಳಿಗೆ ಆರನೇ, ಹತ್ತನೇ, ಹದಿನಾಲ್ಕನೇ ವಾರದಲ್ಲಿ ತಪ್ಪದೇ ರೋಟಾ ವೈರಸ್ ಲಸಿಕೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ ಸೂಚನೆಯಂತೆ ಪ್ರತೀ ಮಗುವಿಗೂ ನೀಡಬೇಕು. ಈ ಲಸಿಕೆಯ ಸದುಪಯೋಗ ಸಿಗುವಂತೆ ಕಾರ್ಯನಿರ್ವಹಿಸಬೇಕೆಂದು ಸಂಬಂ ಧಪಟ್ಟ ಅಧಿಕಾರಿಗಳಿಗೆ ಅವರು ಸೂಚಿಸಿದರು.
ರೋಟಾ ವೈರಸ್ನಿಂದ ಉಂಟಾಗುವ ಪರಿಣಾಮಗಳ ಹಾಗೂ ಲಸಿಕೆ ನೀಡುವುದರ ಕುರಿತು ಆರೋಗ್ಯ ಇಲಾಖೆಯು ಆಶಾ ಕಾರ್ಯಕರ್ತೆಯರಿಗೆ ಹಾಗೂ ಇತರ ಸಿಬಂದಿಗೆ ಅಗತ್ಯ ತರಬೇತಿ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕುಟುಂಬ ಕಲ್ಯಾಣ ಇಲಾಖೆ ಮೂಲಕ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಬೇಕು ಮತ್ತು ಗ್ರಾಮ ಸಭೆಗಳಲ್ಲಿ ರೋಟಾ ವೈರಸ್ ಮತ್ತು ಟಿಡಿ ಲಸಿಕೆಗಳ ಕುರಿತು ಅರಿವು ಮೂಡಿಸಬೇಕು ಎಂದರು. ಡಾ| ಸತೀಶ್ಚಂದ್ರ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯಧಿಕಾರಿ ಡಾ| ರಾಮಕೃಷ್ಣ ರಾವ್, ಜಿಲ್ಲಾ ಆರ್ಸಿಎಚ್ ಅಧಿಕಾರಿ ಡಾ| ರಾಜೇಶ್ ಉಪಸ್ಥಿತರಿದ್ದರು.