ಜೂನ್ನೊಳಗೆ 3.5 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಪೂರ್ಣ: ಸಿಎಂ
Team Udayavani, Feb 4, 2020, 10:09 PM IST
ಆನೇಕಲ್: ರಾಜ್ಯದಲ್ಲಿ ಜಾರಿಯಲ್ಲಿರುವ ಎಲ್ಲಾ ವಸತಿ ಯೋಜನೆಗಳಡಿ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಸುಮಾರು 3.5 ಲಕ್ಷ ಮನೆಗಳನ್ನು ಜೂನ್ ತಿಂಗಳೊಳಗಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ತಾಲೂಕಿನ ಸರ್ಜಾಪುರ ಗ್ರಾಮದಲ್ಲಿ ಮಾತನಾಡಿ, ಗ್ರಾಮೀಣ ಭಾಗದ ಅಭಿವೃದ್ಧಿಯೇ ನಮ್ಮ ಸರ್ಕಾರದ ಗುರಿಯಾಗಿದೆ. ಬಜೆಟ್ನಲ್ಲಿ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಅಸಂಘಟಿತ ಹಾಗೂ ಆರ್ಥಿಕವಾಗಿ ಹಿಂದುಳಿದ ವಸತಿರಹಿತ ಫಲಾನುಭವಿಗಳಿಗೆ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಕರ್ನಾಟಕ ಗೃಹ ಮಂಡಳಿ ವತಿಯಿಂದ 21 ಸಾವಿರ ನಿವೇಶನ ಅಭಿವೃದ್ಧಿ ಮತ್ತು 770 ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅಲ್ಲದೇ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಲ್ಲಿ 83,119 ಮನೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.