ಐಟಿ ವಿಚಾರಣೆ ಎದುರಿಸಿದ ಚಿತ್ರನಟಿ ರಶ್ಮಿಕಾ ಮಂದಣ್ಣ
Team Udayavani, Jan 21, 2020, 9:04 PM IST
ಮೈಸೂರು: ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಚಿತ್ರ ನಟಿ ರಶ್ಮಿಕಾ ಮಂದಣ್ಣ ಅವರು ಮಂಗಳವಾರ ಮೈಸೂರಿನಲ್ಲಿರುವ ಪ್ರಧಾನ ಆದಾಯ ತೆರಿಗೆ ಆಯುಕ್ತರ ಕಚೇರಿಗೆ ಆಗಮಿಸಿ ವಿಚಾರಣೆ ಎದುರಿಸಿದರು.
ತೆರಿಗೆ ವಂಚನೆ ಹಾಗೂ ಅಕ್ರಮ ಹಣ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ಕು ದಿನದ ಹಿಂದಷ್ಟೇ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವಶಪಡಿಸಿಕೊಂಡಿದ್ದ ದಾಖಲೆಗಳಿಗೆ ಹೆಚ್ಚಿನ ಮಾಹಿತಿ ನೀಡಲು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 9 ಮಂದಿ ಆಪ್ತರೊಂದಿಗೆ ನಜರ್ಬಾದ್ನಲ್ಲಿರುವ ಆದಾಯ ತೆರಿಗೆಯ ಪ್ರಧಾನ ಕಚೇರಿಗೆ ಆಗಮಿಸಿದರು. ಪ್ರಾದೇಶಿಕ ತೆರಿಗೆ ಆಯುಕ್ತ ಸಂಜಯ್ ಗಾಂಧಿ ನೇತೃತ್ವದಲ್ಲಿ ಐವರು ಅಧಿಕಾರಿಗಳು ಮೂರು ಗಂಟೆ ಅವರನ್ನು ವಿಚಾರಣೆಗೆ ಒಳಪಡಿಸಿದರು.