ದೋಸ್ತಿ ಸರ್ಕಾರಕ್ಕೆ ಅಗ್ನಿಪರೀಕ್ಷೆ, ಸ್ಪೀಕರ್ ನಿರ್ಧಾರಕ್ಕೆ ಸುಪ್ರೀಂನಲ್ಲಿ ಹಿನ್ನಡೆ
Team Udayavani, Jul 11, 2019, 11:29 AM IST
ನವದೆಹಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ನ 10 ಅತೃಪ್ತ ಶಾಸಕರು ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಪೀಠ ಗುರುವಾರ ತುರ್ತು ವಿಚಾರಣೆ ನಡೆಸಿ, ಇಂದು ಸಂಜೆ 6ಗಂಟೆಯೊಳಗೆ ಅತೃಪ್ತ ಶಾಸಕರ ರಾಜೀನಾಮೆ ಪತ್ರದ ಪರಿಶೀಲನೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಗೆ ನಿರ್ದೇಶನ ನೀಡಿದೆ.
ಹತ್ತು ಮಂದಿ ಅತೃಪ್ತ ಶಾಸಕರು ಇಂದೇ ಖುದ್ದಾಗಿ ಸ್ಪೀಕರ್ ಮುಂದೆ ಹಾಜರಾಗುವಂತೆ ಸುಪ್ರೀಂಕೋರ್ಟ್ ಪೀಠದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯ್ ಸೂಚನೆ ನೀಡಿದ್ದಾರೆ. ಅಲ್ಲದೇ ಅತೃಪ್ತ ಶಾಸಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಕರ್ನಾಟಕ ಡಿಜಿಪಿಗೆ ಸುಪ್ರೀಂ ಸೂಚನೆ ನೀಡಿದೆ.
ಅತೃಪ್ತ ಶಾಸಕರ ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ನಾಳೆ ಅತೃಪ್ತ ಶಾಸಕರ ಅರ್ಜಿ ವಿಚಾರಣೆ ವೇಳೆ ಸ್ಪೀಕರ್ ನಿರ್ಧಾರವನ್ನು ಪ್ರಕಟಿಸಬೇಕು ಎಂದು ತಿಳಿಸಿದೆ. 15 ಮಂದಿ ಅತೃಪ್ತ ಶಾಸಕರಲ್ಲಿ 10 ಮಂದಿ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಅತೃಪ್ತ ಶಾಸಕರ ಪರವಾಗಿ ಮುಕುಲ್ ರೋಹ್ಟಗಿ ಅವರು ಸುಪ್ರೀಂಕೋರ್ಟ್ ನಲ್ಲಿ ವಾದ ಮಂಡಿಸಿದ್ದರು. ರೋಹ್ಟಗಿ ಅವರ ವಾದ ಆಲಿಸಿದ ನಂತರ ಈ ಆದೇಶವನ್ನು ಸುಪ್ರೀಂಕೋರ್ಟ್ ಪ್ರಕಟಿಸಿದೆ.