ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ
Team Udayavani, Oct 13, 2019, 10:13 AM IST
ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರನ್ನು ದೂರ ಇಟ್ಟು ಏನು ಮಾಡೋಕೆ ಆಗಲ್ಲ. ವಿಧಾನಸಭೆಯಲ್ಲಿ ನಡೆಯುವ ಕಲಾಪ ಎಲ್ಲರಿಗೂ ಗೊತ್ತಾಗಬೇಕು. ಕಲಾಪ ಗೌಪ್ಯವಾಗಿ ನಡೆಯೋದಿಲ್ಲ, ಎಲ್ಲರಿಗೂ ಗೊತ್ತಾಗಲಿ ಅಂತಾ ನಾವು ಚರ್ಚೆ ಮಾಡೋದು. ಈ ನಿರ್ಧಾರ ಸಿಎಂ ಹಾಗೂ ಸ್ವೀಕರ್ ಇಬ್ಬರು ಸೇರಿಯೇ ಮಾಡಿರುವುದು ಸರ್ಕಾರಕ್ಕೆ ಗೊತ್ತಿಲ್ಲದೆ ಏನು ಮಾಡೋಕೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಬಿಜೆಪಿ ಸರ್ಕಾರದವರು ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಪ್ರಜಾಪ್ರಭುತ್ವದ ಕೊಲೆ. ಪ್ರಜಾಪ್ರಭುತ್ವದ ಯಶಸ್ವಿಯಾಗಬೇಕಾದರೆ, ನಾಲ್ಕು ಅಂಗಗಳು ಮುಖ್ಯ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಮುಖ್ಯ. ಪ್ರತಿ ನಿಯಮಾಯಳಿಗಳನ್ನು ನಾವೇ ಮಾಡಿಕೊಂಡಿರುವುದು. ನಿಯಮಾವಳಿಗಳು ಯಾವ ದೇವಲೋಕದಿಂದ ಇಳಿದು ಬಂದಿಲ್ಲ. ನಿಯಮಗಳ ಬಗ್ಗೆ ಬಿಜೆಪಿ ಯವರಿಗೆ ನಂಬಿಕೆ ಇಲ್ಲ. ಸರ್ಕಾರದ ಹುಳುಕು, ವೈಫಲ್ಯಗಳು ಗೊತ್ತಾಗುತ್ತದೆ ಎಂದು ಮಾಧ್ಯಮದವರನ್ನ ದೂರ ಇಟ್ಟಿದ್ದಾರೆ ಎಂದು ವಿಧಾನಸಭೆಗೆ ಮಾಧ್ಯಮಗಳ ಪ್ರವೇಶವನ್ನು ನಿಯಂತ್ರಿಸುವ ಸರಕಾರದ ನೀತಿಯ ವಿರುದ್ಧ ಹರಿಹಾಯ್ದರು.
ವಿರೋಧ ಪಕ್ಷದ ನಾಯಕರು ಮಾತಾನಾಡುವಾಗ ತಡೆಯೋದು ಸರಿಯಲ್ಲ. ನಾನು ಯಾವತ್ತೂ ಈ ಥರದ ಸ್ವೀಕರ್ ನೋಡಿಲ್ಲ. ಮುಂದೆ ಇದೆ ತರಹ ನಡೆದರೆ ವಿಧಾನಸಭೆ ನಡೆಯಲು ಬಿಡುವುದಿಲ್ಲ. ಈ ಸಲ ಒಪ್ಪಿಕೊಂಡಿದ್ದೇನೆ ಎಂದರು.