ಮತಾಂತರ, ಗೋಹತ್ಯೆ, ಕೇಸರಿ ಶಾಲಿಗಷ್ಟೇ ಬಿಜೆಪಿ ಆದ್ಯತೆ: ಡಿಕೆಶಿ
Team Udayavani, Feb 15, 2022, 6:40 AM IST
ಬೆಂಗಳೂರು: ಬಿಜೆಪಿಯವರು ಗೋಹತ್ಯೆ, ಮತಾಂತರ, ಕೇಸರಿ ಶಾಲು ವಿಚಾರವಾಗಿ ಮಾತ್ರ ಮಾತನಾಡುತ್ತಾರೆಯೇ ಹೊರತು ಅವರ ಪಕ್ಷದ ಸಾಧನೆ ಬಗ್ಗೆಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಹೇಳಿದರು.
ತಾತ್ಕಾಲಿಕವಾಗಿ ನಾವು ಅಧಿಕಾರದಿಂದ ದೂರ ಇರಬಹುದು. ಆದರೆ ಮತ್ತೆ ನಾವು ಶಕ್ತಿಶಾಲಿಯಾಗಿ ಬೆಳೆಯುತ್ತೇವೆ. ನೀವೆಲ್ಲರೂ ನಿಷ್ಠೆಯಿಂದ ಪಕ್ಷಕ್ಕೆ ದುಡಿದರೆ ಮತ್ತೆ ಕಾಂಗ್ರೆಸ್ ಬಲಿಷ್ಠವಾಗಿ ಬೆಳೆಯಲಿದೆ. ಎಲ್ಲರೂ ಪ್ರಾಮಾಣಿಕತೆ, ನಿಷ್ಠೆಯಿಂದ ವ್ಯಕ್ತಿಪೂಜೆ ಬಿಟ್ಟು ಪಕ್ಷ ಪೂಜೆ ಮಾಡಬೇಕು ಎಂದು ಕರೆ ನೀಡಿದರು.
ಈಗಾಗಲೇ ಎಐಸಿಸಿಸಿ ಅಧ್ಯಕ್ಷ ಸ್ಥಾನದಿಂದ ಹಿಡಿದು, ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಈ ಹಿಂದೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ, ರಾಜ್ಯ ಅಧ್ಯಕ್ಷ ಸ್ಥಾನಕ್ಕೆ, ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದ ಇತಿಹಾಸವಿದೆ. ಮುಂದಿನ ದಿನಗಳಲ್ಲಿ ಮತ್ತೆ ಎಲ್ಲ ಹುದ್ದೆಗಳಿಗೂ ಚುನಾವಣೆ ನಡೆಯಲಿದ್ದು, ಈ ಸದಸ್ಯತ್ವ ನೋಂದಣಿ ಅಭಿಯಾನ ಬಹಳ ಮುಖ್ಯವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ಬೆಳ್ಳಂಬೆಳಗ್ಗೆ ಆಕಾಶದಲ್ಲಿ ವಿಚಿತ್ರ ಬೆಳಕಿನಾಟ : ಬೆರಗಾದ ಜನತೆ
ಸದಸ್ಯತ್ವ ಅಭಿಯಾನಕ್ಕಾಗಿ ರಘುನಂದನ್ ರಾಮಣ್ಣ ನೇತೃತ್ವದಲ್ಲಿ ತಾಂತ್ರಿಕ ಸಮಿತಿ, ಆರ್.ವಿ. ವೆಂಕಟೇಶ್ ನೇತೃತ್ವದಲ್ಲಿ ರಾಜಕೀಯ ಸಮಿತಿ ರಚಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷನಾಗಿ ನಾನೇ ಸದಸ್ಯತ್ವ ನೋಂದಣಿ ಮಾಡುತ್ತಿದ್ದೇನೆ. ಇಂದು ಬೆಳಗ್ಗೆ ನಾನು ರೈಲಿನಿಂದ ಇಳಿಯುತ್ತಿದ್ದಂತೆ 11 ಜನರ ಸದಸ್ಯತ್ವ ನೋಂದಣಿ ಮಾಡಿದ್ದೇನೆ ಎಂದು ತಿಳಿಸಿದರು.
ಕಳೆದ ತಿಂಗಳು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದಾಗ ಅವರು ಸದಸ್ಯತ್ವ ನೋಂದಣಿ ಬಗ್ಗೆ ಗಮನ ಹರಿಸುವಂತೆ ಸೂಚಿಸಿದರು. ಪರಿಣಾಮವಾಗಿ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ ಎಂದರು.
ಜಿಲ್ಲಾವಾರು ಸಭೆ
ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಮಾತನಾಡಿ, ಪ್ರತಿ ಬೂತ್ಗೆ ಇಬ್ಬರು ನೋಂದಣಿದಾರರನ್ನು ನೇಮಿಸಲಾಗುತ್ತಿದ್ದು, ಇಂದು ಮುಖ್ಯ ನೋಂದಣಿದಾರರು ಹಾಗೂ ಉಸ್ತುವಾರಿ ವಹಿಸಿಕೊಂಡಿರುವ ಬೆಂಗಳೂರು, ಮೂರು ವಿಭಾಗ, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರದ ಏಳು ಜಿಲ್ಲಾ ಕಾಂಗ್ರೆಸ್ ವ್ಯಾಪ್ತಿಯ ಬ್ಲಾಕ್, ವಾರ್ಡ್, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಸಭೆ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ಇಲ್ಲಿ ಹೆಚ್ಚಿನ ಸದಸ್ಯತ್ವ ಮಾಡಲಾಗುತ್ತಿತ್ತು. ಹೀಗಾಗಿ ಈ ಬಾರಿಯೂ ಹೆಚ್ಚಿನ ಸದಸ್ಯರನ್ನು ಮಾಡಬೇಕು. ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್, ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದು, ಒಂದೂವರೆ ವರ್ಷದಲ್ಲಿ ಸಾರ್ವತ್ರಿಕ ಚುನಾವಣೆ ಬರಲಿದೆ. ಈ ಸಮಯದಲ್ಲಿ ನಾವು ಮನೆ ಮನೆಗಳಿಗೆ ಹೋಗಲು ಇದೊಂದು ಅವಕಾಶ ಎಂದು ಹೇಳಿದರು.
ಮಹಾದಾಯಿ ವಿಚಾರದಲ್ಲಿ ಗೋವಾದವರು ಏನಾದರೂ ಮಾಡಿಕೊಳ್ಳಲಿ ನಮಗೆ ರಾಜ್ಯದ ಹಿತ ಮುಖ್ಯ. ನಮಗೆ ಗೋವಾದಿಂದ ಅನ್ಯಾಯವಾಗುತ್ತಿದೆ. ಅದರ ವಿರುದ್ಧ ನಮ್ಮ ಧ್ವನಿ ಇರುತ್ತದೆ. ರಾಜ್ಯದ ಪರ ನಮ್ಮ ತತ್ವ ಸಿದ್ಧಾಂತ ಇರುತ್ತದೆ. ಮಹಾದಾಯಿ ವಿಚಾರದಲ್ಲಿ ಪಾದಯಾತ್ರೆ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು
-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?