Congress: ಸಿದ್ದು ನಿವಾಸಕ್ಕೆ ಟಿಕೆಟ್ ಆಕಾಂಕ್ಷಿಗಳ ದೌಡು
Team Udayavani, Apr 8, 2023, 7:43 AM IST
ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರಿ ಟಿಕೆಟ್ ಆಕಾಂಕ್ಷಿಗಳು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
2ನೇ ಪಟ್ಟಿಯಲ್ಲೂ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಆತಂಕದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿಲ್ಲಿ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು. ಮಾಜಿ ಮೇಯರ್ ಸಂಪತ್ ರಾಜ್, ಮಾಜಿ ಶಾಸಕ ಪ್ರಸನ್ನಕುಮಾರ್ ಅವರೂ ಟಿಕೆಟ್ಗೆ ಸಾಕಷ್ಟು ಪ್ರಯತ್ನ ನಡೆಸುತ್ತಿರುವುದರಿಂದ ತೀರ್ಮಾನ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.
ಈ ಮಧ್ಯೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹಾಗೂ ಚಿಕ್ಕಪೇಟೆ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಅವರ ಪತಿ ಮಲ್ಲಿಕಾರ್ಜುನ್ ಸಹ ಭೇಟಿಯಾಗಿ ಚಿಕ್ಕಪೇಟೆ ಕ್ಷೇತ್ರದ ಬಗ್ಗೆ ಸಮಾಲೋಚಿಸಿದರು. ಚಿಕ್ಕಪೇಟೆಗೆ ಮಾಜಿ ಶಾಸಕ ಆರ್.ವಿ.ದೇವರಾಜ್ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಬಲಿಜ ಸಮಾಜಕ್ಕೆ ಸೇರಿದ ದೇವರಾಜ್ಗೆ ಟಿಕೆಟ್ ಕೊಡದಿದ್ದರೆ ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿರುವ ಬಲಿಜ ಸಮುದಾಯದ ಜನ ತಮ್ಮ ಪಕ್ಷ ಬೆಂಬಲಿಸುವುದಿಲ್ಲ ಎಂಬ ಆತಂಕವಿದೆ. ಜತೆಗೆ ಬೆಂಗಳೂರಿನಲ್ಲಿ ಲಿಂಗಾಯತರಿಗೆ ಒಂದೂ ಟಿಕೆಟ್ ಕೊಡದಿದ್ದರೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂಬ ಆತಂಕ ಮತ್ತೂಂದೆಡೆ. ಹೀಗಾಗಿ ಚಿಕ್ಕಪೇಟೆ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿದೆ.