ರಾಜ್ಯದಲ್ಲಿ ಕೋಳಿ, ಮೊಟ್ಟೆ ಮಾರಾಟಕ್ಕೆ ನಿರ್ಬಂಧವಿಲ್ಲ, ಎಚ್ಚರ ಅಗತ್ಯ : ಪ್ರಭು ಚೌವ್ಹಾಣ್
Team Udayavani, Jan 8, 2021, 7:37 PM IST
ಬೆಂಗಳೂರು : ರಾಜ್ಯದಲ್ಲಿ ಕೋಳಿ ಮೊಟ್ಟೆ ಹಾಗೂ ಕೋಳಿ ಮಾಂಸ ಮಾರಾಟಕ್ಕೆ ಯಾವುದೇ ನಿರ್ಬಂಧವಿಲ್ಲ ಆದರೂ ಮುಂಜಾಗ್ರತಾ ಕ್ರಮವಾಗಿ ನಿಗಾ ವಹಿಸಲು ಜಿಲ್ಲಾಧಿಕಾರಿಗಳಿಗೆ ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಕೇರಳ ರಾಜ್ಯದಲ್ಲಿ ಹಕ್ಕಿಜ್ವರದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಸಚಿವರು ರಾಜ್ಯದ ಜಿಲ್ಲಾಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ, ನಂತರ ಮಾತನಾಡಿದ ಸಚಿವರು ರಾಜ್ಯದಲ್ಲಿ ಇದುವರೆಗೆ ಹಕ್ಕಿ ಜ್ವರದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಆದರೂ ಮುಂಜಾಗ್ರತಾ ಕ್ರಮವಾಗಿ ನಿಗಾವಹಿಸಲು ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಇಲ್ಲಿಯವರೆಗೆ ಯಾವುದೇ ಹಕ್ಕಿಜ್ವರ ಪ್ರಕರಣ ಕಂಡುಬಂದಿಲ್ಲ ಆದರೂ ಇಲಾಖೆಯ ಅಧಿಕಾರಿಗಳು ಹೆಚ್ಚು ಎಚ್ಚರಿಕೆವಹಿಸಿ ಎಂದು ತಿಳಿಸಿದ್ದಾರೆ. ಸಾರ್ವಜನಿಕರು ಆತಂಕ ಪಡದೆ ಮೊಟ್ಟೆ ಮತ್ತು ಮಾಂಸವನ್ನು ಸೇವಿಸಬಹುದಾಗಿದೆ ಎಂದರು.
ಇದನ್ನೂ ಓದಿ:ಹೂತು ಹೋಗುವ ಹಿಮದಲ್ಲಿ ಗರ್ಭಿಣಿಯನ್ನು ಹೊತ್ತು ಆಸ್ಪತ್ರೆಗೆ ದಾಖಲಿಸಿದ ಯೋಧರು
ಕೇರಳ ರಾಜ್ಯವನ್ನು ಹೊರತುಪಡಿಸಿ ಇತರೇ ರಾಜ್ಯಗಳಿಗೆ ಕೋಳಿ ಮತ್ತು ಕೋಳಿ ಉತ್ಪನ್ನಗಳ ಮಾರಾಟ ಹಾಗೂ ಸಾಗಾಣಿಕೆಗಳಿಗೆ ಯಾವುದೇ ನಿರ್ಬಂಧ ಇರುವುದಿಲ್ಲ ಆದ್ದರಿಂದ ಸಾರ್ವಜನಿಕರು ಯಾವುದೇ ರೀತಿ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಗಡಿ ಭಾಗದಲ್ಲಿ ಹೈಅಲರ್ಟ್
ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಭಾಗದ ಜಿಲ್ಲೆಗಳು ಹಾಗೂ ಇತರೇ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕೋಳಿ ಶೀತ ಜ್ವರದ ರೋಗೋದ್ರೇಕ ತಡೆಗಟ್ಟಲು, ರೋಗ ನಿಯಂತ್ರಣ ಸಮಿತಿ ಸಭೆಗಳನ್ನು ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಅರಣ್ಯ ಇಲಾಖೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಜೊತೆಗೂಡಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ತಿಳಿಸಲಾಗಿದೆ.
ಎಲ್ಲಾ ಕೋಳಿ ಫಾರಂಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ರೋಗ ನಿಯಂತ್ರಣ ಔಷಧಿಗಳಿಂದ ಸ್ವಚ್ಛಗೊಳಿಸುವುದು ಮತ್ತು ಕನಿಷ್ಟ ಜೈವಿಕ ರಕ್ಷಣಾ ಪದ್ದತಿಗಳನ್ನು ಅಳವಡಿಕೊಳ್ಳುವಂತೆ ತೀರ್ಮಾನಿಸಿ ಕ್ರಮವಹಿಸುವಂತೆ ತಿಳಿಸಲಾಗಿದೆ.