ಮಂಗಳೂರು ಹಿಂಸಾಚಾರದ ಸಾಕ್ಷ್ಯ!; 35 ದೃಶ್ಯದ ವಿಡಿಯೋ ಬಿಡುಗಡೆ ಮಾಡಿದ ಕುಮಾರಸ್ವಾಮಿ
ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಸಾಕಷ್ಟು ಸತ್ಯಾಂಶ ಮುಚ್ಚಿಡಲಾಗಿದೆ.
Team Udayavani, Jan 10, 2020, 1:41 PM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಗಲಾಟೆಗೆ ಸಂಬಂಧಿಸಿದ 35 ವಿಡಿಯೋ ದೃಶ್ಯಗಳನ್ನು ಬಿಡುಗಡೆ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಗಲಭೆಗೆ ಸಂಬಂಧಿಸಿದಂತೆ ಸಾಕಷ್ಟು ಸತ್ಯಾಂಶ ಮುಚ್ಚಿಡಲಾಗಿದೆ. ಪೊಲೀಸ್ ಅಧಿಕಾರಿಗಳು ಪ್ರಾಮಾಣಿಕವಾಗಿ ನಡೆದುಕೊಂಡಿಲ್ಲ ಎಂದು ಈ ಸಂದರ್ಭದಲ್ಲಿ ಆರೋಪಿಸಿದರು.
ಮಂಗಳೂರು ಹಿಂಸಾಚಾರ ಘಟನೆಯಲ್ಲಿ ಪೊಲೀಸರಿಂದಲೇ ದೌರ್ಜನ್ಯ ನಡೆದಿದೆ ಎಂದು ದೂರಿರುವ ಕುಮಾರಸ್ವಾಮಿ ಪೊಲೀಸರ ವಿಡಿಯೋಗೆ ಕೌಂಟರ್ ಆಗಿ ಗಲಾಟೆ ದೃಶ್ಯದ ವಿಡಿಯೋವನ್ನು ಬಿಡುಗಡೆಗೊಳಿಸಿರುವುದಾಗಿ ಹೇಳಿದರು.
ಮಂಗಳೂರು ಗಲಭೆ ಪ್ರಕರಣದ ಬಗ್ಗೆ ಮ್ಯಾಜಿಸ್ಟ್ರೇಟ್, ಸಿಐಡಿ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ. ಘಟನೆಗೆ ಕೇರಳದಿಂದ ಬಂದವರು ಕಾರಣ ಎಂದು ಗೃಹಸಚಿವರೇ ಹೇಳಿದ್ದಾರೆ. ಮಾಹಿತಿ ಗೊತ್ತಿದ್ದರೆ ಯಾಕೆ ಯಾರನ್ನೂ ಈವರೆಗೂ ಬಂಧಿಸಿಲ್ಲ ಎಂದು ಪ್ರಶ್ನಿಸಿದರು.