ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲು ಮುಂದಾದ ಅಶೋಕ್ ಮನಗೂಳಿ
Team Udayavani, Feb 25, 2021, 11:27 PM IST
ಬೆಂಗಳೂರು: ಸಿಂಧಗಿ ಕ್ಷೇತ್ರದ ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ದಿವಂಗತ ಎಂ.ಸಿ.ಮನಗೊಳಿ ಪುತ್ರ ಅಶೋಕ್ ಮನಗೂಳಿ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ.
ಈ ಬೆಳವಣಿಗೆ ಉಪ ಚುನಾವಣೆಗೆ ಸಜ್ಜಾಗುತ್ತಿರುವ ಜೆಡಿಎಸ್ಗೆ ಶಾಕ್ ಉಂಟಾಗಿದೆ. ಎರಡು ದಿನಗಳ ಹಿಂದೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಸಂಬಂಧ ಮಾತುಕತೆ ನಡೆಸಿದ್ದಾರೆ. ಟಿಕೆಟ್ ಖಾತರಿಪಡಿಸಿದರೆ ಕಾಂಗ್ರೆಸ್ ಸೇರುವುದಾಗಿ ಅಶೋಕ್ ಮನಗೊಳಿ ತಿಳಿಸಿದರು. ಕ್ಷೇತ್ರದ ನಾಯಕರು ಹಾಗೂ ಬ್ಲಾಕ್ ಕಾಂಗ್ರೆಸ್ , ಜಿಲ್ಲಾ ಘಟಕ ಒಪ್ಪಿದರೆ ಸೇರ್ಪಡೆ ಮಾಡಿಕೊಳ್ಳಲಾಗುವುದು.
ಟಿಕೆಟ್ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು ಎನ್ನಲಾಗಿದೆ. ಈ ಮಧ್ಯೆ ಪ್ರಜ್ವಲ್ ರೇವಣ್ಣ ಸೇರಿ ಜೆಡಿಎಸ್ ನಾಯಕರು ಪಕ್ಷ ಬಿಡದಂತೆ ಅಶೋಕ್ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಒಪ್ಪಿದರೆ ಶೀಘ್ರದಲ್ಲೇ ಅಶೋಕ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ.