ಪಿಯುಸಿ, ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಲ್ಲ
Team Udayavani, Mar 20, 2020, 6:55 PM IST
ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಿರ್ದಿಷ್ಟ ದಿನಾಂಕಗಳಲ್ಲೇ ನಡೆಯಲಿದೆ. ಯಾವುದೇ ಪರೀಕ್ಷೆಯನ್ನು ಮುಂದೂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೋವಿಡ್ 19 ಭೀತಿ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಮುಂದೂಡಲಾಗಿದೆ ಎಂಬ ವದಂತಿ ಹಬ್ಬುತ್ತಿರುವ ಸಂಬಂಧ ಸ್ಪಷ್ಟೀಕರಣ ನೀಡಿರುವ ಸಚಿವರು, ಸರ್ಕಾರ ಅಥವಾ ಪದವಿಪೂರ್ವ ಇಲಾಖೆಯಿಂದ ಪರೀಕ್ಷೆಯನ್ನು ಮುಂದೂಡಿಲ್ಲ. ವಿದ್ಯಾರ್ಥಿಗಳು, ಪಾಲಕ, ಪೋಷಕರು ವದಂತಿಗಳಿಗೆ ಕಿವಿಕೊಡಬಾರದು ಎಂದು ಮನವಿ ಮಾಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯ ದಿನಾಂಕವನ್ನು ಬದಲಿಸಿಲ್ಲ :
ಮಾ.27ರಿಂದ ಆರಂಭಗೊಳ್ಳಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮುಂದೂಡುವ ಅಥವಾ ಪರೀಕ್ಷಾ ದಿನಾಂಕ ಬದಲಿಸುವ ಯಾವುದೇ ನಿರ್ಧಾರವನ್ನು ಸರ್ಕಾರ ಅಥವಾ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಈವರೆಗೂ ತೆಗೆದುಕೊಂಡಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಈ ಬಗ್ಗೆ ಗೊಂದಲ ಅಥವಾ ಭಯ ಪಡುವ ಅಗತ್ಯವಿಲ್ಲ ಮತ್ತು ವದಂತಿಗಳಿಗೂ ಕಿವಿಕೊಡಬಾರದು ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.