ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಸುಪ್ರೀಂಕೋರ್ಟ್
Team Udayavani, Oct 21, 2019, 1:25 PM IST
ನವದೆಹಲಿ: ಅನರ್ಹ ಶಾಸಕರ ಪೈಕಿ 15 ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ದಿನಾಂಕ ಹತ್ತಿರುವಾಗುತ್ತಿರುವ ನಡುವೆಯೇ ಸುಪ್ರೀಂಕೋರ್ಟ್ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸೋಮವಾರ ಮತ್ತೆ ಮುಂದೂಡಿದೆ.
ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಬೇಕಾಗಿದ್ದು, ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಿಚಾರಣೆ ಮುಂದೂಡುವಂತೆ ಪೀಠಕ್ಕೆ ಮನವಿ ಮಾಡಿಕೊಂಡಿದ್ದರು.
ಸಿಬಲ್ ಅವರ ಮನವಿ ಮೇರೆಗೆ ಸುಪ್ರೀಂಕೋರ್ಟ್ ಪೀಠ ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 23ಕ್ಕೆ ನಿಗದಿಪಡಿಸಿ ಆದೇಶ ನೀಡಿದೆ. ಇದರಿಂದಾಗಿ ತಾವು ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲಿ ಚುನಾವಣೆ ಸ್ಪರ್ಧೆಗೆ ಅವಕಾಶ ದೊರೆಯಲಿದೆಯೇ ಎಂಬ ಕುತೂಹಲದಲ್ಲಿದ್ದ ಅನರ್ಹ ಶಾಸಕರು ಮತ್ತೆ ಎರಡು ದಿನ ಕಾಯುವಂತಾಗಿದೆ.