ಮತ್ತೊಬ್ಬರ ಫೋನ್ಗೆ ಎಚ್ಡಿಕೆ ಕಿವಿ?
Team Udayavani, Aug 15, 2019, 6:00 AM IST
ಬೆಂಗಳೂರು: ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ವಿವಾದದ ಸ್ವರೂಪ ಪಡೆದಿದ್ದ ದೂರವಾಣಿ ಕದ್ದಾಲಿಕೆ ಇದೀಗ ಮತ್ತೆ ಸದ್ದು ಮಾಡುತ್ತಿದೆ.
ಹಿಂದೆ ಸಿಎಂ ಆಗಿದ್ದ ಕುಮಾರಸ್ವಾಮಿಯವರು ಶಾಸಕರು, ಬಿಜೆಪಿ ನಾಯಕರ ದೂರವಾಣಿ ಕದ್ದಾಲಿಕೆ ಮಾಡಿಸುತ್ತಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅತೃಪ್ತರ ಫೋನ್ ಟ್ಯಾಪ್ ಮಾಡಿ ಬ್ಲಾಕ್ವೆುೕಲ್ ಮಾಡ ಲಾಗುತ್ತಿತ್ತು ಎಂಬ ಆರೋಪ ಮಾಡಲಾಗಿದೆ. ಆದರೆ ಈ ಆರೋಪವನ್ನು ಕುಮಾರಸ್ವಾಮಿ ತಳ್ಳಿ ಹಾಕಿದ್ದಾರೆ.
ಹಿಂದಿನ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರು ಹಾಗೂ ಕೆಲವು ಪತ್ರಕರ್ತರದು ದೂರವಾಣಿ ಕದ್ದಾಲಿಕೆ ಮಾಡಲಾಗುತ್ತಿತ್ತು. ಆಗಲೇ ನಾನು ಈ ಬಗ್ಗೆ ಪ್ರಸ್ತಾಪ ಮಾಡಿದ್ದೆ. ದೂರವಾಣಿ ಕದ್ದಾಲಿಕೆ ಬಗ್ಗೆ ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆವರಿಗೆ ಮನವಿ ಮಾಡಲಾಗುವುದು ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಹೇಳಿದ್ದಾರೆ.
ನನ್ನ ಫೋನ್ ಕೂಡ ಕದ್ದಾಲಿಕೆ: ಮತ್ತೂಂದೆಡೆ ಮೈಸೂ ರಿನಲ್ಲಿ ಮಾತನಾಡಿದ ಮಾಜಿ ಸಚಿವ ಎಚ್.ವಿಶ್ವನಾಥ್, ಹಿಂದಿನ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ನನ್ನ ಫೋನ್ ಕೂಡಾ ಕದ್ದಾಲಿಕೆ ಮಾಡಿಸಿದ್ದರು. ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ದ್ದರೂ ನನ್ನ ಮೇಲೆ ಅವರಿಗೆ ನಂಬಿಕೆ ಇರಲಿಲ್ಲ. ನಾನು ನನ್ನ ಕುಟುಂಬದವರ ಜತೆ ಮಾತನಾಡಿದ್ದನ್ನು ಕದ್ದಾಲಿಕೆ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.
ಸರ್ಕಾರದ ಕಾರ್ಯವೈಖರಿ ಬಗ್ಗೆ ಅತೃಪ್ತಿ ಹೊಂದಿದ್ದ ಶಾಸಕರ ಫೋನ್ ಕದ್ದಾಲಿಕೆ ಮಾಡಿ ಬ್ಲಾಕ್ವೆುೕಲ್ ಮಾಡಲು ಬಳಕೆ ಮಾಡಲಾಗಿತ್ತು. ಇದರ ಬಗ್ಗೆ ಕಠಿಣ ಕ್ರಮ ಆಗಬೇಕು, ತನಿಖೆಯೂ ಆಗಬೇಕು ಎಂದು ಆಗ್ರಹಿಸಿದ್ದಾರೆ.
ಚರ್ಚಿಸಿ ಕ್ರಮ: ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ , ಮುಖ್ಯ ಕಾರ್ಯದರ್ಶಿ ಜತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ದೂರವಾಣಿ ಕದ್ದಾಲಿಕೆ ಕುರಿತ ಆರೋಪ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆ ಬಗ್ಗೆ ದೂರುಗಳು ಬಂದಿವೆ ಎಂದು ತಿಳಿಸಿದರು.
ಕದ್ದಾಲಿಕೆ ಮಾಡಿಸಿರಲಿಲ್ಲ: ಫೋನ್ ಟ್ಯಾಪಿಂಗ್ ಆರೋಪಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ನಗರ ಪೊಲೀಸ್ ಆಯುಕ್ತ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ರಾವ್ ಲಾಬಿ ಮಾಡಿದ್ದರು. ಅದಕ್ಕಾಗಿ ರಾಜಕೀಯ ನಾಯಕರ ಜತೆ ಮಾತುಕತೆ ನಡೆಸಿದ್ದರು ಎಂದು ಹೇಳಲಾದ ದೂರವಾಣಿ ಸಂಭಾಷಣೆಯ ಆಡಿಯೋ ಬಯಲಾಗಿತ್ತು. ಅದರ ಬಗ್ಗೆ ತನಿಖೆ ನಡೆಸಲು ಅಧಿಕಾರಿಯನ್ನೂ ನೇಮಿಸಲಾಗಿತ್ತು. ಹಿಂದಿನ ಪೊಲೀಸ್ ಆಯುಕ್ತರೇ ದೂರವಾಣಿ ಕದ್ದಾಲಿಕೆ ಮಾಡಿಸಿದ್ದರು ಎಂಬ ಆರೋಪವೂ ಕೇಳಿಬಂದಿತ್ತು. ಈ ಪ್ರಕರಣವು ಇದೀಗ ರಾಜಕೀಯ ನಾಯಕರ ದೂರವಾಣಿ ಕದ್ದಾಲಿ ಕೆಯೂ ಮಾಡಲಾಗಿತ್ತು ಎಂಬ ವಿಚಾರ ಬಯಲಾಗಲು ಕಾರಣವಾಗಿದೆ.
ಉದಯವಾಣಿ ವರದಿ ಮಾಡಿತ್ತು
ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಶಾಸಕರ ಫೋನ್ ಟ್ಯಾಪಿಂಗ್ ಬಗ್ಗೆ ‘ಉದಯವಾಣಿ’ 2018ರ ಆ. 29 ರಂದು ವಿಶೇಷ ವರದಿ ಮಾಡಿತ್ತು. ಆ ನಂತರ ಆಗ ಪ್ರತಿಪಕ್ಷ ನಾಯಕರಾಗಿದ್ದ ಯಡಿಯೂರಪ್ಪ ಅವರು ತಮ್ಮ ದೂರವಾಣಿ ಸಹ ಕದ್ದಾಲಿಕೆ ಮಾಡಲಾಗುತ್ತಿದೆ, ಫೋನ್ ಟ್ಯಾಪಿಂಗ್ ಅನುಭವ ತಮಗೂ ಆಗಿದೆ ಎಂದು ಹೇಳಿದ್ದರು.