ಭೀಕರ ಅಪಘಾತ: ಅಂತ್ಯಕ್ರಿಯೆಗೆ ತೆರಳುತ್ತಿದ್ದ 18 ಮಂದಿ ದುರ್ಮರಣ
Team Udayavani, Nov 28, 2021, 11:38 AM IST
ಕೋಲ್ಕತಾ: ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್ಗೆ ಅಂತ್ಯ ಕ್ರಿಯೆಗೆ ತೆರಳುತ್ತಿದ್ದ ಇನ್ನೊಂದು ಮಿನಿ ಟ್ರಕ್ ಢಿಕ್ಕಿ ಹೊಡೆದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಭಾನುವಾರ ನಸುಕಿನ ವೇಳೆ ನಡೆದಿದೆ.
35ಕ್ಕೂ ಹೆಚ್ಚು ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಕ್ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹಂಸಖಾಲಿ ಎಂಬಲ್ಲಿ ಹೆದ್ದಾರಿಯ ಬದಿಯಲ್ಲಿ ನಿಂತಿದ್ದ ಮತ್ತೊಂದು ಕಲ್ಲು ತುಂಬಿದ ಟ್ರಕ್ಗೆ ಢಿಕ್ಕಿ ಹೊಡೆದು 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರಲ್ಲಿ ಮಹಿಳೆಯರು ಸೇರಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 6 ಮಂದಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಎಂದು ತಿಳಿದು ಬಂದಿದೆ.
ದಟ್ಟ ಮಂಜು ಆವರಿಸಿದ್ದ ಕಾರಣ ಅವಘಡ ನಡೆದಿದೆ ಎಂದು ವರದಿಯಾಗಿದೆ.
ನಾವೆಲ್ಲಾ ಚಕ್ಡಾದಿಂದ ನಬದ್ವೀಪ್ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಹೋಗುತ್ತಿದ್ದವರು ಎಂದು ಗಾಯಗೊಂಡವರಲ್ಲಿ ಒಬ್ಬರು ಹೇಳಿದ್ದಾರೆ.
ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.