ಸಾಗುವಳಿದಾರರಿಗೆ ಭೂಮಿ ನೀಡಲು ಕ್ರಮ: ಸಚಿವ ಆರ್. ಅಶೋಕ್
Team Udayavani, Sep 21, 2022, 11:00 PM IST
ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಅನಾದಿಕಾಲದಿಂದ ಸಾಗುವಳಿ ಮಾಡುತ್ತಿರುವ ಕಾನೆ, ಬಾನೆ, ಕುಮ್ಕಿ ಜಮೀನುಗಳನ್ನು ಮಂಜೂರು ಮಾಡಲು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ಬಳಿಕ ಭೂಮಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಬಿಜೆಪಿಯ ಪ್ರತಾಪಸಿಂಹ ನಾಯಕ್ ಪ್ರಸ್ತಾವಕ್ಕೆ ಉತ್ತರಿಸಿದ ಅವರು, ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನಬೆಟ್ಟ ಇತ್ಯಾದಿ ಸರಕಾರಿ ಜಮೀನುಗಳನ್ನು ಮಂಜೂರು ಮಾಡಲು ನೀತಿ ರೂಪಿಸಲು ಸಚಿವ ಸಂಪುಟ ಉಪ ಸಮಿತಿ ರಚಿಸಲಾಗಿದೆ. ಅದಕ್ಕೆ ನಾನೇ ಅಧ್ಯಕ್ಷನಾಗಿದ್ದೇನೆ.
ಸಮಿತಿಯು ಈಗಾಗಲೆ ಹಲವು ಸಭೆ ಮಾಡಲಾಗಿದ್ದು, ಶೀಘ್ರದಲ್ಲಿ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಾಗುವುದು. ಅನಂತರ ಸೂಕ್ತ ನೀತಿ ರೂಪಿಸಿ ಭೂಮಿ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.